ದಾವಣಗೆರೆ | ಡ್ರಗ್ಸ್ ದಂಧೆ: ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ಬಂಧನ

ಸಾಂದರ್ಭಿಕ ಚಿತ್ರ
ದಾವಣಗೆರೆ : ಇಲ್ಲಿನ ವಿದ್ಯಾನಗರದಲ್ಲಿ ಡ್ರಗ್ಸ್ ದಂಧೆ ಪತ್ತೆ ಹಚ್ಚಿರುವ ವಿದ್ಯಾನಗರ ಪೊಲೀಸರು ಕಾಂಗ್ರೆಸ್ ಮುಖಂಡ ಸೇರಿ ನಾಲ್ವರನ್ನು ಬಂಧಿಸಿರುವ ಘಟನೆ ವರದಿಯಾಗಿದೆ.
ರಾಜಸ್ಥಾನ ಮೂಲದ ರಾಮ್ ಸ್ವರೂಪ್, ದೊನಾರಮ್, ದಾವಣಗೆರೆ ಸಿದ್ದವೀರಪ್ಪ ಬಡಾವಣೆಯ ದೇವಿಲಾಲ್ ಹಾಗೂ ಕಾಂಗ್ರೆಸ್ ಮುಖಂಡ ರಿಯಲ್ ಎಸ್ಟೇಟ್ ಉದ್ಯಮಿ ಶಾಮನೂರು ವೇದಮೂರ್ತಿ ಬಂಧಿತರು. ಇನ್ನು ಮೂವರು ಆರೋಪಿಗಳು ಪರಾರಿಯಾಗಿದ್ದು ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ವಿದ್ಯಾನಗರ ಪೊಲೀಸರು ದಾಳಿ ನಡೆಸಿದ ವೇಳೆ ಡ್ರಗ್ಸ್ ಜಾಲ ಪತ್ತೆಯಾಗಿದೆ. ದಾಳಿಯಲ್ಲಿ 290 ಗ್ರಾಂ ಸಿಂಥೆಟಿಕ್ ಡ್ರಗ್ಸ್, 90 ಗ್ರಾಂ ಬ್ರೌನ್ ಶುಗರ್ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಜಸ್ಥಾನದಿಂದ ಡ್ರಗ್ಸ್ ತಂದು ಉದ್ಯಮಿಗಳು, ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಕುರಿತು ಮಾತನಾಡಿದ ಎಸ್ಪಿ ಉಮಾ ಪ್ರಶಾಂತ, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 290 ಗ್ರಾಂ ಸಿಂಥೆಟಿಕ್ ಡ್ರಗ್ಸ್, 90 ಗ್ರಾಂ ಬ್ರೌನ್ ಶುಗರ್ ವಶಕ್ಕೆ ಪಡೆಯಲಾಗಿದೆ. ರಾಜಸ್ಥಾನದಿಂದ ಇಲ್ಲಿಗೆ ತಂದು ಮಾರಾಟ ಮಾಡುತ್ತಿದ್ದಾರೆ. ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ಹೇಳಿದರು.





