Davangere South By-Election | ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ನಾಮಪತ್ರ ಸಲ್ಲಿಕೆ

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಹಿನ್ನಲೆಯಲ್ಲಿ ಅಸಮಾಧಾನಗೊಂಡ ಸಾದಿಕ್ ಪೈಲ್ವಾನ್ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ, ʼಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲʼವೆಂದು ಸ್ಪಷ್ಟಪಡಿಸಿದರು.
ಸೋಮವಾರ ತಮ್ಮ ಬೆಂಬಲಿಗರೊಂದಿಗೆ ವಿವಿಧಡೆ ಮೆರವಣೆಗೆೆ ನಡೆಸಿ ಮಹಾನಗರಪಾಲಿಕೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಟಿಕೆಟ್ ನೀಡುವ ಭರವಸೆ ನೀಡಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಕೈಕೊಟ್ಟಿದೆ. ಆದ್ದರಿಂದ ನಾನು ಪಕ್ಷೇತರನಾಗಿ ಚುನಾವಣೆಗೆ ನಿಂತಿದ್ದು, ನಾಮಪತ್ರ ವಾಪಸ್ ಪಡೆಯಲ್ಲ ಎಂದರು.
ಶಾಮನೂರು ಶಿವಶಂಕರಪ್ಪ ಅವರಿಗಾಗಿ ಸುಮಾರು 40 ವರ್ಷದಿಂದ ದುಡಿದಿದ್ದೇನೆ. ಅವರ ಗೆಲುವಿಗೆ ಶ್ರಮಿಸಿದ್ದೇನೆ. ಅವರ ನಿಧನದ ನಂತರವಾದರೂ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಬಹುದಿತ್ತು. ಆದರೆ, ಅದು ಹುಸಿಯಾಗಿದೆ ಎಂದರು.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಒತ್ತಡಕ್ಕೆ ಮಣಿಯುವುದಿಲ್ಲ. ಇದು ಚರ್ಚೆ . ಮಾತುಕತೆಯ ಹಂತವನ್ನು ಮೀರಿದ ತೀರ್ಮಾನವಾಗಿದೆ. ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ಹಾಗೂ ಎಸ್ಸಿ-ಎಸ್ಟಿ ಸಮುದಾಯ ನನ್ನ ಬೆಂಬಲಕ್ಕೆ ಇದೆ. ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು.






