Dharwad | ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪ್ರೊ.ದೇವರಾಜನ್ ತಂಗದುರೈ ಅಮಾನತು

ಧಾರವಾಡ : ಸಸ್ಯಶಾಸ್ತ್ರ ವಿಭಾಗದ ಪ್ರೊ.ದೇವರಾಜ್ ತಂಗದುರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬುಧವಾರ ಎಬಿವಿಪಿ ಕಾರ್ಯಕರ್ತರು ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತರು ಆಡಳಿತ ಕಚೇರಿಯೊಳಗೆ ನುಗ್ಗಲು ಯತ್ನಿಸಿದ್ದು, ಪೊಲೀಸರು ತಡೆಯಲು ಮುಂದಾದರೂ ಪ್ರತಿಭಟನಾಕಾರರು ಗದ್ದಲ ಮುಂದುವರಿಸಿದರು. ಈ ವೇಳೆ ಆಡಳಿತ ಕಚೇರಿ ಎದುರಿನ ಹೂ ಕುಂಡಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿನಿಗೆ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರೊ.ದೇವರಾಜ್ ತಂಗದುರೈ ಅವರನ್ನು ತಕ್ಷಣ ಅಮಾನತುಗೊಳಿಸುವಂತೆ ಎಬಿವಿಪಿ ಆಗ್ರಹಿಸಿತ್ತು. ಈ ಆರೋಪದ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯ ಆಡಳಿತವು ಪ್ರಾಥಮಿಕ ಕ್ರಮವಾಗಿ ಪ್ರೊಫೆಸರ್ ಅವರನ್ನು ಅಮಾನತುಗೊಳಿಸಿದೆ.
ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಎ.ಎಂ.ಖಾನ್ ಅವರು ಅಮಾನತು ಆದೇಶ ಹೊರಡಿಸಿದ್ದು, ಸಸ್ಯಶಾಸ್ತ್ರ ವಿಭಾಗದ ಪ್ರೊ.ದೇವರಾಜ್ ತಂಗುದೊರೈ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಅಮಾನತು ಆದೇಶ ಹೊರಬಿದ್ದ ಬಳಿಕ ಎಬಿವಿಪಿ ಕಾರ್ಯಕರ್ತರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.




