Hubballi | ರಸ್ತೆ ನಿರ್ಮಾಣದ ಜಾಗದ ಕೆಳಗಡೆ ಪುಷ್ಕರಣಿ ಆರೋಪ; ಹಿಂದುತ್ವ ಸಂಘಟನೆಗಳಿಂದ ಪ್ರತಿಭಟನೆ

ಹುಬ್ಬಳ್ಳಿ : ಭವಾನಿ ಶಂಕರ ದೇವಾಲಯದ ಪುಷ್ಕರಣಿ ಜಾಗದಲ್ಲಿ ರಸ್ತೆ ನಿರ್ಮಿಸಿರುವುದಾಗಿ ಆರೋಪಿಸಿ, ಇದನ್ನು ವಿರೋಧಿಸಿ ಹಿಂದುತ್ವ ಸಂಘಟನೆಗಳು ಶನಿವಾರ ಹುಬ್ಬಳ್ಳಿಯ ಚನ್ನಪೇಟ ಗಾರ್ಡನ್ ಹತ್ತಿರ ಪ್ರತಿಭಟನೆ ನಡೆಸಿ, ಬಳಿಕ ವಿವಾದಿತ ಸ್ಥಳದತ್ತ ತೆರಳಲು ಕಾರ್ಯಕರ್ತರು ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ತಡೆದ ಘಟನೆ ನಡೆದಿದೆ.
‘ಪುಷ್ಕರಣಿ ಉಳಿಸಿ, ಭವಾನಿ ಶಂಕರ ಕೀರ್ತಿ ಬೆಳಸಿ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾಕಾರರು ರಸ್ತೆ ಮಧ್ಯೆಯೇ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡಿದ್ದು, ಶಾಸಕ ಅರವಿಂದ ಬೆಲ್ಲದ, ಶಾಸಕ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಸೇರಿದಂತೆ ಬಿಜೆಪಿ ನಾಯಕರು ಭಾಗವಹಿಸಿದ್ದರು. ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಪುಷ್ಕರಣಿ ಜಾಗದಲ್ಲಿ ನಿರ್ಮಿಸಿರುವ ರಸ್ತೆಯನ್ನು ಕೂಡಲೇ ತೆರವುಗೊಳಿಸಿ, ಪುರಾತನ ದೇವಾಲಯದ ಪುಷ್ಕರಣಿ ಜಾಗವನ್ನು ಉತ್ಖನನ ಮಾಡಿ ಸಂರಕ್ಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿ, ʼರಸ್ತೆ ನಿರ್ಮಾಣ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಇದೀಗ ಪ್ರತಿಭಟನೆ ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ಸ್ಥಳದಲ್ಲಿ ನಿಯಮ ಉಲ್ಲಂಘಿಸಿ ರಸ್ತೆ ನಿರ್ಮಿಸಲಾಗಿದೆʼ ಎಂದು ಆರೋಪಿಸಿದ ಅವರು, ರಸ್ತೆ ತೆರವುಗೊಳಿಸುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದರು.
ಶಾಸಕ ಅರವಿಂದ ಬೆಲ್ಲದ್ ಮಾತನಾಡಿ, ಭವಾನಿ ಶಂಕರ ದೇವಾಲಯ ಪುರಾತನ ದೇವಾಲಯವಾಗಿದ್ದು, ಪುಷ್ಕರಣಿ ಜಾಗದಲ್ಲಿ ರಸ್ತೆ ನಿರ್ಮಿಸಿರುವುದು ಸರಿಯಲ್ಲ. ಪಾಲಿಕೆ ಸದಸ್ಯರ ಒತ್ತಡಕ್ಕೆ ಮಣಿದು ಪಾಲಿಕೆ ಅಧಿಕಾರಿಗಳು ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ ಎಂದು ಆರೋಪಿಸಿದರು.
ಈ ಮಧ್ಯೆ, 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನಾಕಾರರು ವಿವಾದಿತ ಸ್ಥಳದತ್ತ ತೆರಳಲು ಮುಂದಾಗಿದ್ದು, ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಾಗ ನೂಕಾಟ, ತಳ್ಳಾಟ ನಡೆಯಿತು. ಬಳಿಕ ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹಾಗೂ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆಯಲಾಯಿತು.
ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಮುಂದುವರಿಸಿದ್ದಾರೆ.






