Hubli | ಫ್ಲೈಓವರ್ ಕಾಮಗಾರಿ ವೇಳೆ ಅವಘಡ: ಕಬ್ಬಿಣದ ರಾಡ್ ಬಿದ್ದು ವೃದ್ಧೆಗೆ ಗಂಭೀರ ಗಾಯ

ಹುಬ್ಬಳ್ಳಿ: ನಗರದ ಹೊಸೂರು ವೃತ್ತದ ಪಡುರಂಗಿ ಬಿಲ್ಡಿಂಗ್ ಸಮೀಪ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿಯಲ್ಲಿ ಅವಘಡ ಸಂಭವಿಸಿದ್ದು, ಕಬ್ಬಿಣದ ರಾಡ್ ತಲೆಯ ಮೇಲೆ ಬಿದ್ದ ಪರಿಣಾಮ ಪಾದಚಾರಿ ವೃದ್ಧ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.
ಗಾಯಗೊಂಡ ಮಹಿಳೆಯನ್ನು ಯಶೋಧಾ ಜಾಧವ ಎಂದು ಗುರುತಿಸಲಾಗಿದೆ. ಇವರು ಮೂಲತಃ ಶಿಗ್ಗಾಂವ ತಾಲೂಕಿನ ತವರುಮಳಳ್ಳಿ ಗ್ರಾಮದವರಾಗಿದ್ದು. ಹುಬ್ಬಳ್ಳಿಯ ನವನಗರದಲ್ಲಿರುವ ಮಗಳ ಮನೆಗೆ ಹೊರಟಿದ್ದರು. ರಸ್ತೆ ಬದಿಯ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮೇಲ್ಭಾಗದಲ್ಲಿ ನಡೆಯುತ್ತಿದ್ದ ಕಾಮಗಾರಿಯಿಂದ ಕಬ್ಬಿಣದ ರಾಡ್ ಆಕಸ್ಮಿಕವಾಗಿ ಯಶೋಧಾ ಅವರ ಮೈಮೇಲೆ ಬಿದ್ದಿದೆ. ಇದರಿಂದ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾಮಗಾರಿ ಸ್ಥಳದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಯಾವುದೇ ಮುಂಜಾಗ್ರತಾ ವ್ಯವಸ್ಥೆ ಅಥವಾ ಸಾರ್ವಜನಿಕರ ಸುರಕ್ಷತೆಗೆ ಬೇಕಾದ ತಡೆಗೋಡೆಗಳನ್ನು ಸಮರ್ಪಕವಾಗಿ ಅಳವಡಿಸದೇ ಕಾಮಗಾರಿ ನಡೆಸುತ್ತಿರುವ ಆರೋಪ ಕೇಳಿಬಂದಿದೆ.
ಘಟನೆ ನಡೆದ ಕೂಡಲೇ ಸ್ಥಳದಲ್ಲಿದ್ದ ಕೆಲ ಕಾರ್ಮಿಕರು ಅಲ್ಲಿಂದ ತೆರಳಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಈ ನಿರ್ಲಕ್ಷ್ಯದಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗುತ್ತಿದೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ಫ್ಲೈಓವರ್ ಕಾಮಗಾರಿ ವೇಳೆ ಕಳೆದ ವರ್ಷ ಸಂಭವಿಸಿದ್ದ ದುರಂತದಲ್ಲಿ ಎಎಸ್ಸೈ ನೇಮಿರಾಜ್ ಮೃತಪಟ್ಟಿದ್ದರು. ಆ ಘಟನೆ ಬಳಿಕವೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರದಿರುವುದು ಇದೀಗ ಮತ್ತೆ ಪ್ರಶ್ನೆಗೆ ಕಾರಣವಾಗಿದೆ.
ಈ ಘಟನೆ ಹಿನ್ನೆಲೆಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಝಂಡು ಸಂಸ್ಥೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಕಿಮ್ಸ್ ಆಸ್ಪತ್ರೆಗೆ ಬೇಟೆ ನೀಡಿ ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.
-------------
*ಈ ಹಿಂದೆ ಎಎಸ್ಸೈ ಮೃತ್ಯು
ಹುಬ್ಬಳ್ಳಿಯ ಕೋರ್ಟ್ ವೃತ್ತದ ಬಳಿ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಯ (ಫ್ಲೈಓವರ್) ದುರಂತದಲ್ಲಿ ಎಎಸ್ಸೈನಾಭಿರಾಜ್ ದಯಣ್ಣವರ್ (59) ಸೆಪ್ಟೆಂಬರ್ 10ರಂದು ಅವರು ದ್ವಿಚಕ್ರ ವಾಹನದಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ, ಮೇಲ್ಸೇತುವೆಯ ಕಬ್ಬಿಣದ ರಾಡ್ (ಪೈಪ್) ಅವರ ತಲೆಯ ಮೇಲೆ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೆಎಮ್ ಸಿ ಆರ್ ಐ ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಸೆಪ್ಟೆಂಬರ್ 15ರಂದು ನಿಧನರಾಗಿದ್ದರು.






