Belur | ಬಗರ್ ಹುಕುಂ ಅಕ್ರಮ ಭೂ ಮಂಜೂರಾತಿ ಪ್ರಕರಣ : ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಸಿಐಡಿ ವಶಕ್ಕೆ

ಬೇಲೂರು : ಬಗರ್ ಹುಕುಂ ಅಕ್ರಮ ಭೂ ಮಂಜೂರಾತಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲೂರು ವಿಧಾನಸಭಾ ಕ್ಷೇತ್ರದ ಮಾಜಿ ಜೆಡಿಎಸ್ ಶಾಸಕ ಕೆ.ಎಸ್.ಲಿಂಗೇಶ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಬೆಂಗಳೂರಿನಿಂದ ಆಗಮಿಸಿದ ಸಿಐಡಿ ಅಧಿಕಾರಿಗಳ ವಿಶೇಷ ತಂಡವು ಹಳೇಬೀಡಿನಲ್ಲಿರುವ ಕೆ.ಎಸ್. ಲಿಂಗೇಶ್ ಅವರ ನಿವಾಸದ ಮೇಲೆ ದಾಳಿ ನಡೆಸಿ, ಅವರನ್ನು ವಶಕ್ಕೆ ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಹಾಗೂ ವಿಚಾರಣೆ ನಡೆಸಲು ಅವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣದ ಹಿನ್ನೆಲೆ :
2018ರಲ್ಲಿ ಜೆಡಿಎಸ್ ಪಕ್ಷದಿಂದ ಬೇಲೂರು ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಕೆ.ಎಸ್. ಲಿಂಗೇಶ್ ಅವರು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರ ಅಧ್ಯಕ್ಷತೆಯ ಅವಧಿಯಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ ಭೂ ಮಂಜೂರಾತಿ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು.
ಈ ಸಂಬಂಧ ಕೋಲಾರ ಮೂಲದ ಆರ್ಟಿಐ ಕಾರ್ಯಕರ್ತ ರಮೇಶ್ ಕುಮಾರ್ ಅವರು ಬೇಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸರಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು.






