ಬೇಲೂರು | ಪಟಾಕಿ ಸಿಡಿಸಿದ್ದಕ್ಕೆ ರೊಚ್ಚಿಗೆದ್ದ ಕಾಡಾನೆಯಿಂದ ಆಟೋ ರಿಕ್ಷಾ ಜಖಂ

ಹಾಸನ, ಮಾ.30: ಬೇಲೂರು ತಾಲೂಕಿನ ಕುಪ್ಪಗೋಡು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಗ್ರಾಮಕ್ಕೆ ನುಗ್ಗಿದ ದೈತ್ಯ ಒಂಟಿಸಲಗವೊಂದು ಆಟೊ ರಿಕ್ಷಾವನ್ನು ಜಖಂಗೊಳಿಸಿದೆ.
ಗ್ರಾಮದಲ್ಲಿ ಕಾಣಿಸಿಕೊಂಡ ಆನೆಯನ್ನು ಓಡಿಸಲು ಗ್ರಾಮಸ್ಥರು ಪಟಾಕಿ ಸಿಡಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಾಡಾನೆ, ಸ್ಥಳೀಯ ನಿವಾಸಿ ಕೃಷ್ಣಪ್ಪ ಎಂಬವರು ತನ್ನ ಮನೆಯ ಮುಂದೆ ನಿಲ್ಲಿಸಿದ್ದ ಆಟೋ ಮೇಲೆ ದಾಳಿ ನಡೆಸಿ ಜಖಂಗೊಳಿಸಿದೆ.
ಕಳೆದೊಂದು ವಾರದಿಂದ ಕುಪ್ಪಗೋಡು ಸುತ್ತಮುತ್ತ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಕಾಫಿ ತೋಟಗಳು ಹಾಗೂ ಕೃಷಿ ಜಮೀನುಗಳಿಗೆ ನುಗ್ಗುತ್ತಿವೆ. ಇದರಿಂದ ಕೃಷಿಕರು ತೋಟಗಳಿಗೆ ತೆರಳಲು ಹೆದರುತ್ತಿದ್ದು, ದೈನಂದಿನ ಜೀವನವೂ ಅಸ್ತವ್ಯಸ್ತವಾಗಿದೆ.
ಆನೆಗಳ ಹಾವಳಿಯಿಂದ ಬೆಳೆಗಳಿಗೆ ಹಾನಿ ಸಂಭವಿಸುವ ಭೀತಿ ಹೆಚ್ಚಾಗಿದ್ದು, ರಾತ್ರಿ ವೇಳೆ ಗ್ರಾಮಸ್ಥರು ನಿದ್ದೆ ಮರೆತು ಕಾವಲು ಕಾಯುವ ಪರಿಸ್ಥಿತಿ ಉಂಟಾಗಿದೆ. ಅರಣ್ಯ ಇಲಾಖೆಯ ತ್ವರಿತ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಪ್ರದೇಶದಲ್ಲಿ ಕಾಡಾನೆಗಳ ಸಂಚಾರ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು, ಮಾನವ-ಆನೆ ಸಂಘರ್ಷ ತಡೆಗಟ್ಟಲು ಶಾಶ್ವತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.




