ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ | ಜ.31: ರಿಯಲ್ ಎಸ್ಟೇಟ್ ಸಂಸ್ಥೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಉದ್ಯಮಿ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣದ ಕುರಿತು ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಶುಕ್ರವಾರ ಕನಕೋತ್ಸವದ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, "ಅಧಿಕಾರಿಗಳು ಪ್ರಶ್ನಿಸುತ್ತಿದ್ದ ಸಂದರ್ಭದಲ್ಲಿ ರಾಯ್ ಅವರು ‘ಐದು ನಿಮಿಷ ಸಮಯ ನೀಡಿ’ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದರು.
ರಾಯ್ ಅವರ ವಿಚಾರಣೆಗಾಗಿ ಕೇರಳದಿಂದ ಒಂದು ತಂಡ ಬಂದಿತ್ತು ಎಂಬ ಮಾಹಿತಿಯೂ ಇದೆ. ಈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯಿಂದಲೂ ವರದಿ ಕೇಳಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮಗ್ರ ಹಾಗೂ ಉನ್ನತ ಮಟ್ಟದ ತನಿಖೆ ಕೈಗೊಳ್ಳಲಿದೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.
ರಾಯ್ ಅವರು ಒಳ್ಳೆಯ ಉದ್ಯಮಿಯಾಗಿದ್ದು, ಇಂತಹ ದುರ್ಘಟನೆ ಸಂಭವಿಸಬಾರದಿತ್ತು ಎಂದು ಅವರು ವಿಷಾದ ವ್ಯಕ್ತಪಡಿಸಿದರು.





