ರಾಯಚೂರು ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ : ಮುಜಾಹಿದ್ ಮರ್ಚೆಡ್ ಆಗ್ರಹ

ರಾಯಚೂರು: ಈ ಬಾರಿ ಮುಂಗಾರು ಮಳೆಯ ಪ್ರಮಾಣವು ಸಾಮಾನ್ಯಕ್ಕಿಂತ ಕಡಿಮೆ ಇರುವುದು ಹವಾಮಾನ ಇಲಾಖೆ ಹಾಗೂ ಕೃಷಿ ಇಲಾಖೆಗೆ ಮೊದಲೇ ತಿಳಿದಿದ್ದರೂ, ರೈತರಿಗೆ ಅಗತ್ಯ ಮುನ್ನೆಚ್ಚರಿಕೆ, ಜಾಗೃತಿ ಮತ್ತು ವೈಜ್ಞಾನಿಕ ಕೃಷಿ ಸಲಹೆಗಳನ್ನು ನೀಡುವಲ್ಲಿ ಕೃಷಿ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ (ರಿ) ಜಿಲ್ಲಾ ಕಾರ್ಯಾಧ್ಯಕ್ಷರಾದ ಮುಜಾಹಿದ್ ಮರ್ಚೆಡ್ ಆರೋಪಿಸಿದ್ದಾರೆ.
ಜಿಲ್ಲೆಯ ಸಾವಿರಾರು ರೈತರು ಸಾಲ ಮಾಡಿ ಬೀಜ, ಗೊಬ್ಬರ ಹಾಗೂ ಇತರೆ ಕೃಷಿ ಸಾಮಗ್ರಿಗಳನ್ನು ಖರೀದಿಸಿ ಬಿತ್ತನೆ ನಡೆಸಿದ್ದರು. ಆರಂಭದಲ್ಲಿ ಸುರಿದ ಅಲ್ಪ ಪ್ರಮಾಣದ ಮಳೆಯಿಂದ ಬೆಳೆಗಳು ಮೊಳಕೆಯೊಡೆದರೂ, ನಂತರ ಮಳೆಯ ಕೊರತೆಯಿಂದ ಸಸಿಗಳು ಒಣಗಿ ಹೋಗುತ್ತಿದ್ದು, ರೈತರು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ರೈತರು ಮರುಬಿತ್ತನೆಗೂ ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ.
ಈ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಮೊದಲೇ ತಿಳಿದಿದ್ದರೂ, ಯಾವ ಬೆಳೆಗಳನ್ನು ಬೆಳೆಯಬೇಕು, ಯಾವ ಬೀಜಗಳನ್ನು ಬಳಸಬೇಕು, ಮಣ್ಣಿನ ಪರೀಕ್ಷೆ, ಗೊಬ್ಬರದ ಸಮರ್ಪಕ ಬಳಕೆ, ಕೀಟನಾಶಕಗಳ ಬಳಕೆ, ನೀರಿನ ನಿರ್ವಹಣೆ ಹಾಗೂ ಹವಾಮಾನಕ್ಕೆ ಅನುಗುಣವಾದ ಕೃಷಿ ಪದ್ಧತಿಗಳ ಕುರಿತು ರೈತರಿಗೆ ಸಮರ್ಪಕ ಜಾಗೃತಿ ಮೂಡಿಸುವಲ್ಲಿ ಕೃಷಿ ಇಲಾಖೆ ಸಂಪೂರ್ಣ ವಿಫಲವಾಗಿದೆ. ಇದರಿಂದ ಸಾವಿರಾರು ರೈತರು ನಷ್ಟ ಅನುಭವಿಸುವಂತಾಗಿದೆ.
ವಿಶೇಷವಾಗಿ ಜಂಟಿ ಕೃಷಿ ನಿರ್ದೇಶಕ ಶ್ರೀ ಪ್ರಕಾಶ ಚೌಹಾಣ ಅವರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯ ಈ ಪರಿಸ್ಥಿತಿಗೆ ಪ್ರಮುಖ ಕಾರಣವಾಗಿದೆ ಎಂದು ಮುಜಾಹಿದ್ ಮರ್ಚೆಡ್ ಆರೋಪಿಸಿದ್ದಾರೆ. ಇಲಾಖೆಯ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿದ್ದರೆ, ಇಂದು ರೈತರು ಇಂತಹ ಸಂಕಷ್ಟಕ್ಕೆ ಸಿಲುಕುತ್ತಿರಲಿಲ್ಲ. ಆದ್ದರಿಂದ ಸದರಿ ಅಧಿಕಾರಿಯ ವಿರುದ್ಧ ಸರ್ಕಾರ ತಕ್ಷಣವೇ ಕ್ರಮ ಕೈಗೊಂಡು, ಅವರನ್ನು ಹುದ್ದೆಯಿಂದ ವಜಾಗೊಳಿಸಿ ಇಲಾಖೆಯ ವೈಫಲ್ಯದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ, ರಾಜ್ಯ ಸರ್ಕಾರವು ತಕ್ಷಣವೇ ರಾಯಚೂರು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ಹಾನಿಯ ಸಮಗ್ರ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ, ಇನ್ಪುಟ್ ಸಬ್ಸಿಡಿ, ಬೆಳೆ ಪರಿಹಾರ ಧನ, ಸಾಲ ಮರುಪಾವತಿಗೆ ಅವಧಿ ವಿಸ್ತರಣೆ, ಬಡ್ಡಿ ಮನ್ನಾ ಹಾಗೂ ಅಗತ್ಯವಿದ್ದಲ್ಲಿ ಉಚಿತ ಮರುಬಿತ್ತನೆ ಬೀಜ ಮತ್ತು ಗೊಬ್ಬರವನ್ನು ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ರೈತರ ಜೀವ ಮತ್ತು ಜೀವನೋಪಾಯವನ್ನು ರಕ್ಷಿಸುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು. ಸರ್ಕಾರ ಮತ್ತು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ರೈತರ ಪರವಾಗಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುಜಾಹಿದ್ ಮರ್ಚೆಡ್ ಎಚ್ಚರಿಕೆ ನೀಡಿದ್ದಾರೆ.






