ಯಡ್ರಾಮಿ ತಾಲೂಕಿನಲ್ಲಿ ಅರ್ಥಪೂರ್ಣವಾಗಿ 80ನೇ ಸ್ವಾತಂತ್ರ್ಯ ದಿನಾಚರಣೆ

ಯಡ್ರಾಮಿ: ತಾಲೂಕು ಆಡಳಿತದ ವತಿಯಿಂದ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಶನಿವಾರ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಲೂಕು ದಂಡಾಧಿಕಾರಿ ಯಲ್ಲಪ್ಪ ಸುಬೇದಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಉಪನ್ಯಾಸಕ ದೇವೇಂದ್ರಪ್ಪ ಬಡಿಗೇರ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಭಕ್ತಿಯನ್ನು ಸ್ಮರಿಸಿ, ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ಸಾಂಸ್ಕೃತಿಕ ಹಾಗೂ ವಿವಿಧ ಮನರಂಜನಾ ಕಾರ್ಯಕ್ರಮಗಳು ಜರುಗಿದವು.
ದೇಶದ ಏಕತೆ, ಸಮಗ್ರತೆ ಹಾಗೂ ಪ್ರಗತಿಗಾಗಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಸಂಕಲ್ಪದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಶ್ಯಾಮ ಭಜಂತ್ರಿ, ಪಿಎಸ್ಐ ಶ್ರೀಶೈಲ ಅಂಬಂಟಿ, ಪಶು ವೈದ್ಯಧಿಕಾರಿ ಪ್ರಭು ಕಲ್ಲೂರ್, ಸರ್ಕಾರಿ ನೌಕರ ಸಂಘದ ತಾಲೂಕ ಅಧ್ಯಕ್ಷ ಶಿವಕುಮಾರ ಡಂಬಳ, ಬಸವರಾಜ ಖಾನಗೌಡ, ಬಸವರಾಜ ಪಾಟೀಲ ಯತ್ನಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.






