Afzalpur | ಕೃಷಿ ಅಧಿಕಾರಿಗಳು ಆಗ್ರೋ ಮಾಲೀಕರೊಂದಿಗೆ ಶಾಮೀಲು; ರೈತರ ಆರೋಪ

ಅಫಜಲಪುರ: ತಾಲೂಕಿನ ಕೃಷಿ ಅಧಿಕಾರಿಗಳು ರೈತರ ಪರವಾಗಿ ಕೆಲಸ ಮಾಡದೆ ಆಗ್ರೋ ಮಾಲಕರ ಪರವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ನೀಡಿ ಮಾತನಾಡಿದ ಅವರು, ಇತ್ತೀಚೆಗೆ ಸುರಿದ ಭಾರೀ ಮಳೆ ಹಾಗೂ ಗಾಳಿಯಿಂದ ತಾಲೂಕಿನ ಅನೇಕ ರೈತರ ಬೆಳೆಗಳಿಗೆ ಹಾನಿಯಾಗಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಕೂಡಲೇ ರೈತರ ಜಮೀನಿಗೆ ಭೇಟಿ ನೀಡಿ ಬೆಳೆಹಾನಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.
ರೈತರ ಸಂಕಷ್ಟವನ್ನು ಅಧಿಕಾರಿಗಳು ನಿರ್ಲಕ್ಷಿಸಿದರೆ ರಸ್ತೆಗಿಳಿದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಂತರ ಮಾತನಾಡಿದ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಗೋಳೆ, ತಾಲೂಕಿನ ವಿವಿಧ ಆಗ್ರೋ ಕೇಂದ್ರಗಳಲ್ಲಿ ಬೀಜ ಮತ್ತು ರಸಗೊಬ್ಬರಗಳನ್ನು ಮನಬಂದಂತೆ ಹೆಚ್ಚುವರಿ ದರಕ್ಕೆ ಮಾರಾಟ ಮಾಡಿ ರೈತರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಆದರೆ ಕೃಷಿ ಅಧಿಕಾರಿಗಳು ಆಗ್ರೋ ಮಾಲಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.
ಕೂಡಲೇ ರೈತರು ಹಾಗೂ ಆಗ್ರೋ ಮಾಲೀಕರ ಸಭೆ ಕರೆಯಬೇಕು. ಸಭೆಯಲ್ಲಿ ಆಗ್ರೋ ಮಾಲೀಕರು ರೈತರಿಗೆ ಯಾವ ರೀತಿಯಲ್ಲಿ ಅನ್ಯಾಯ ಹಾಗೂ ಮೋಸ ಮಾಡುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಾಗುವುದು ಎಂದರು.
ತಕ್ಷಣ ಸಭೆ ಕರೆಯದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಶಿವರಾಜ ಗೂಳೆ, ಪ್ರಶಾಂತ ರಾಚಗೋಳ್, ವಿರೇಶ ಜಮಾದಾರ , ಹಾಜಿ ಮಲ್ಲಬಾದ ಇದ್ದರು.






