Afzalpur | ರಾಜ್ಯ ಹೆದ್ದಾರಿ ತಡೆದು ರೈತ ಹೋರಾಟಗಾರರ ಪ್ರತಿಭಟನೆ; ಭೀಮಾ ನದಿಗೆ ನೀರು ಹರಿಸುವಂತೆ ಆಗ್ರಹ

ಅಫಜಲಪುರ: ಭೀಮಾ ನದಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ತಾಲೂಕು ಸ್ವಾಭಿಮಾನಿ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಕಳೆದ ಆರು ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಕೆಲಕಾಲ ರಾಜ್ಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತ ಹೋರಾಟಗಾರರು, ಉಜನಿ ಜಲಾಶಯದಿಂದ ಭೀಮಾ ನದಿಗೆ ಸಮರ್ಪಕ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಬೇಕು, ಅಫಜಲಪುರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯ ಹೆದ್ದಾರಿ ತಡೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ಪೊಲೀಸರು ಹಾಗೂ ಅಧಿಕಾರಿಗಳ ಮನವಿಯ ಮೇರೆಗೆ ಪ್ರತಿಭಟನಾಕಾರರು ರಸ್ತೆ ತಡೆ ತೆರವುಗೊಳಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ರಮೇಶ ಪಾಟೀಲ ಶಾಂತು ಅಂಜುಟಗಿ, ಶ್ರೀಮಂತ ಬಿರಾದಾರ, ಲತೀಫ್ ಪಟೇಲ್, ಗುರು ಚಾಂದಕವಟೆ, ಮೈಬೂಬ ಸಿದ್ದನೂರ ಸೇರಿದಂತೆ ಹಲವರು ಭಾಗವಹಿಸಿದ್ದರು.




