Afzalpur | ಜೆ.ಎಂ.ಕೊರಬು ಅವರನ್ನು ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡಲಿ: ಶಾಸಕ ಎಂ.ವೈ. ಪಾಟೀಲ್

ಅಫಜಲಪುರ: ನಾನಾ ಕ್ಷೇತ್ರಗಳ ಸಾಧಕರ ಕೋಟಾದಡಿ ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕುರುಬ ಸಮುದಾಯದ ಹಿರಿಯ ಮುಖಂಡ ಜೆ.ಎಂ. ಕೊರಬು ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಶಾಸಕ ಎಂ.ವೈ. ಪಾಟೀಲ್ ನೇತೃತ್ವದಲ್ಲಿ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು.
ಡಾ. ಮಲ್ಲಿಕಾರ್ಜುನ ಖರ್ಗೆ ಅವರ 84ನೇ ಜನ್ಮದಿನದ ಅಂಗವಾಗಿ ದೆಹಲಿಯಲ್ಲಿ ಅವರನ್ನು ಭೇಟಿಯಾದ ಶಾಸಕ ಎಂ.ವೈ. ಪಾಟೀಲ್, ಜೆ.ಎಂ. ಕೊರಬು ಅವರು ಸಮಾಜ ಸೇವೆಯ ಜೊತೆಗೆ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಗಲು-ರಾತ್ರಿ ಶ್ರಮಿಸಿ ತಮ್ಮ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದರು.
ಸಮಾಜ ಸೇವೆ ಮತ್ತು ಸಂಘಟನಾ ಕಾರ್ಯವನ್ನು ಪರಿಗಣಿಸಿ ಜೆ.ಎಂ. ಕೊರಬು ಅವರನ್ನು ವಿಧಾನ ಪರಿಷತ್ನ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡುವಂತೆ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್ ಜಮಾದಾರ, ಸಿದ್ದಾರ್ಥ್ ಬಸರಿಗಿಡ, ಶಿವಾನಂದ ಗಾಡಿ ಸಾಹುಕಾರ, ಉದಯಭಟ್ಟ್, ಸುರೇಶ್ ತಿಬಶೆಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




