ಅಫಜಲಪುರ | ರೈತನ ಮೇಲಿನ ಹಲ್ಲೆ ಪ್ರಕರಣಕ್ಕೆ ಎಫ್ಐಆರ್ ದಾಖಲಿಸಿ : ರೈತ ಸಂಘಗಳ ಆಗ್ರಹ

ಅಫಜಲಪುರ: ತಾಲೂಕಿನ ಗೊಲ್ಲಾಳೇಶ್ವರ ಆಗ್ರೋ ಸಂಸ್ಥೆಯ ಮಾಲೀಕರು ರೈತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಎಫ್ಐಆರ್ ದಾಖಲಿಸಿ, ಸಂಸ್ಥೆಯ ಪರವಾನಗಿಯನ್ನು ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.
ಈ ಕುರಿತು ತಹಸೀಲ್ದಾರ್, ಕೃಷಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಕಲಬುರಗಿ ಜಿಲ್ಲಾಧ್ಯಕ್ಷ ಮಹಾಂತೇಶ್ ಜಮಾದಾರ್ ಮಾತನಾಡಿ, ಜೂನ್ 4ರಂದು ಅಫಜಲಪುರ ತಾಲೂಕಿನ ರೈತರೊಬ್ಬರು ಗೊಲ್ಲಾಳೇಶ್ವರ ಆಗ್ರೋ ಕೇಂದ್ರಕ್ಕೆ ರಸಗೊಬ್ಬರ ಖರೀದಿಸಲು ತೆರಳಿದ್ದ ವೇಳೆ ಯೂರಿಯಾ ಗೊಬ್ಬರದೊಂದಿಗೆ ಇತರೆ ಉತ್ಪನ್ನಗಳನ್ನು ಕಡ್ಡಾಯವಾಗಿ ಖರೀದಿಸುವಂತೆ ಒತ್ತಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ ಎಂದು ಹೇಳಿದರು.
ರೈತರು ಇದನ್ನು ವಿರೋಧಿಸಿದ ಸಂದರ್ಭದಲ್ಲಿ ಸಂಸ್ಥೆಯ ಮಾಲೀಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಕುರಿತು ವಿವಿಧ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಘಟನೆ ನಡೆದ ಆರು ದಿನಗಳಾದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಎಫ್ಐಆರ್ ದಾಖಲಿಸಿಲ್ಲ ಹಾಗೂ ಸಂಸ್ಥೆಯ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತ ಸಮುದಾಯದಲ್ಲಿ ಅನುಮಾನಗಳು ಮೂಡಿದ್ದು, ಇದು ರೈತರ ಆತ್ಮಗೌರವಕ್ಕೆ ಧಕ್ಕೆ ಉಂಟುಮಾಡಿದಂತಾಗಿದೆ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದರು. ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಬೇಡಿಕೆಗಳನ್ನು ನಿರ್ಲಕ್ಷಿಸಿದಲ್ಲಿ ಜೂನ್ 15ರಂದು ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಿವಿಧ ರೈತ, ಕನ್ನಡಪರ ಹಾಗೂ ಸಾಮಾಜಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಉದ್ದೇಶಿತ ಪ್ರತಿಭಟನೆಗೆ ಪೊಲೀಸ್ ಇಲಾಖೆ ಹಾಗೂ ತಾಲೂಕು ಆಡಳಿತ ಅಗತ್ಯ ಬಂದೋಬಸ್ತ್ ಮತ್ತು ಅನುಮತಿ ಕಲ್ಪಿಸಬೇಕು ಎಂದು ಸಂಘಟನೆಗಳ ಮುಖಂಡರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ ನಾಯ್ಕೋಡಿ, ಕರವೇ ತಾಲೂಕು ಅಧ್ಯಕ್ಷ ಶ್ರೀಕಾಂತ ದೇವಣಜಿ, ಕರ್ನಾಟಕ ಜನಸೈನ್ಯ ತಾಲೂಕು ಅಧ್ಯಕ್ಷ ಉಮೇಶ್ ಅಂದೋಡ್ಗಿ, ವಿಜಯ ಸೇನೆ ತಾಲೂಕು ಅಧ್ಯಕ್ಷ ಸಿದ್ದು ಸುಲ್ತಾನಪುರ, ಸಾಮಾಜಿಕ ಕಾರ್ಯಕರ್ತರ ವೇದಿಕೆ ತಾಲೂಕು ಅಧ್ಯಕ್ಷ ಆರ್.ಡಿ. ಪೂಜಾರಿ, ಜೈ ಕರ್ನಾಟಕ ತಾಲೂಕು ಉಪಾಧ್ಯಕ್ಷ ಮುತ್ತು ಕುರಿಮನಿ, ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀಶೈಲಗೌಡ, ಕರವೇ ಕರ್ಜಿಗಿ ವಲಯದ ಅಧ್ಯಕ್ಷ ಸೋಮು ನಾಯ್ಕೋಡಿ, ರೈತ ಸಂಘದ ಚಿಂಚೋಳಿ ಗ್ರಾಮ ಘಟಕದ ಅಧ್ಯಕ್ಷ ಪ್ರಶಾಂತ ರಾಜಗೋಳ, ತಳವಾರ ಸಮಾಜದ ತಾಲೂಕು ಅಧ್ಯಕ್ಷ ಮಾಂತಗೌಡ ತಳವಾರ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.






