Aland | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಸುಮನ್ ಚಿತ್ತರಗಿ ಕರೆ

ಆಳಂದ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಹಾಗೂ ನೈತಿಕ ಹೊಣೆಗಾರಿಕೆಯಾಗಿದೆ ಎಂದು ಸ್ಥಳೀಯ ಪ್ರಧಾನ ಸಿವಿಲ್ ನ್ಯಾಯಾಧೀಶೆ ಕುಮಾರಿ ಸುಮನ್ ಚಿತ್ತರಗಿ ಹೇಳಿದರು.
ಪಟ್ಟಣದ ನ್ಯಾಯಾಲಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಸ್ತುತ ಜಗತ್ತು ಪರಿಸರ ಮಾಲಿನ್ಯ, ಅರಣ್ಯ ನಾಶ, ಹವಾಮಾನ ವೈಪರೀತ್ಯ ಹಾಗೂ ಜಾಗತಿಕ ತಾಪಮಾನ ಏರಿಕೆಯಂತಹ ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ. ಪ್ರಕೃತಿಯ ಸಮತೋಲನ ಹದಗೆಟ್ಟ ಪರಿಣಾಮ ಮಾನವ ಜೀವನದ ಮೇಲೆ ಅನೇಕ ದುಷ್ಪರಿಣಾಮಗಳು ಉಂಟಾಗುತ್ತಿವೆ. ಇಂತಹ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯನ್ನು ಪ್ರತಿಯೊಬ್ಬರೂ ತಮ್ಮ ವೈಯಕ್ತಿಕ ಜವಾಬ್ದಾರಿಯನ್ನಾಗಿ ಪರಿಗಣಿಸಬೇಕಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಾದೇಶಿಕ ಉಪ ವಲಯ ಅರಣ್ಯಾಧಿಕಾರಿ ಶಾಂತರೆಡ್ಡಿ, ಸಾಮಾಜಿಕ ಉಪ ವಲಯ ಅರಣ್ಯಾಧಿಕಾರಿ ವೀರೇಂದ್ರ, ಉಪ ವಲಯ ಅರಣ್ಯಾಧಿಕಾರಿ ಬಾನು ಪ್ರತಾಪ್ ಹಾಗೂ ವನಪಾಲಕ ಹೈದರ ಅಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ವಿವರಿಸಿ, ಸಾರ್ವಜನಿಕರು ಪರಿಸರ ಜಾಗೃತಿಗೆ ಕೈಜೋಡಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕಮಲಾಕರ ವಿ. ರಾಠೋಡ ವಹಿಸಿದ್ದರು. ಈ ಸಂದರ್ಭದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಜೋತಿ ವಿ. ಬಂದಿ, ಸಂಘದ ಕಾರ್ಯದರ್ಶಿ ಬಿ.ಟಿ. ಸಿಂಧೆ, ಅರಣ್ಯ ಇಲಾಖೆಯ ಸಿಬ್ಬಂದಿ ರೇವಣಸಿದ್ಧ ಜಿರೋಳಿ, ನ್ಯಾಯವಾದಿಗಳು, ಕಕ್ಷಿದಾರರು ಹಾಗೂ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದು ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.






