Aland | ಜಮಗಾ ಜೆ ಸೋಲಾರ್ ಯೋಜನೆ ವಿರೋಧಿಸಿ 7ನೇ ದಿನಕ್ಕೆ ಕಾಲಿಟ್ಟ ರೈತರ ಸತ್ಯಾಗ್ರಹ

ಆಳಂದ: ತಾಲೂಕಿನ ಜಮಗಾ ಜೆ ಗ್ರಾಮದ ಸಮೀಪ ಸೋಲಾರ್ ಕಂಪನಿಗಳ ವಿರುದ್ಧ ರೈತರು ನಡೆಸುತ್ತಿರುವ ಸತ್ಯಾಗ್ರಹ ಬುಧವಾರ ಏಳನೇ ದಿನಕ್ಕೆ ಕಾಲಿಟ್ಟಿದೆ. ಜಮೀನು, ಭೂಹಕ್ಕು, ವಿದ್ಯುತ್ ಪ್ರಸರಣ ಕಾಮಗಾರಿ ಹಾಗೂ ಕಂಪನಿಗಳ ಕಾರ್ಯವೈಖರಿಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಪರಿಹಾರ ಕೋರಿ ರೈತರು ನಿರಂತರ ಧರಣಿ ಮುಂದುವರಿಸಿದ್ದಾರೆ.
ಜಮೀನು ಮತ್ತು ವಿದ್ಯುತ್ ಪ್ರಸರಣ ಕಾಮಗಾರಿಗೆ ಸಂಬಂಧಿಸಿದಂತೆ ಹಲವು ಬಾರಿ ಅಹವಾಲು ಸಲ್ಲಿಸಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಂಪನಿ ಪ್ರತಿನಿಧಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ.
ರೈತರ ಸಮಸ್ಯೆಗಳನ್ನು ಸ್ಥಳಕ್ಕೆ ಭೇಟಿ ನೀಡಿ ಆಲಿಸಿ, ಸಂಬಂಧಪಟ್ಟ ಇಲಾಖೆಗಳು ಮತ್ತು ಕಂಪನಿ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಿದ್ದ ಜಿಲ್ಲಾಡಳಿತ ಇದುವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಏಳು ದಿನಗಳ ಸತ್ಯಾಗ್ರಹದ ಬಳಿಕವೂ ಯಾವುದೇ ಸ್ಪಷ್ಟ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಪವರ್ ಸ್ಟೇಷನ್ಗೆ ಮುತ್ತಿಗೆ ಹಾಕುವ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.
ರೈತರ ಹೋರಾಟದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ರೈತರ ಅಹವಾಲುಗಳನ್ನು ಆಲಿಸಿ ಕಾನೂನುಬದ್ಧವಾಗಿ ಸಮಸ್ಯೆ ಬಗೆಹರಿಸಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಆಳಂದ ತಾಲೂಕಿನ ರೈತರ ಸಮಸ್ಯೆಗಳತ್ತ ಸರ್ಕಾರ ಗಮನಹರಿಸಿ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳು ಹಾಗೂ ಕಂಪನಿ ಪ್ರತಿನಿಧಿಗಳ ಸಮ್ಮುಖದಲ್ಲಿ ಪಾರದರ್ಶಕ ಚರ್ಚೆ ನಡೆಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಸತ್ಯಾಗ್ರಹದಲ್ಲಿ ಸಿದ್ದು ಹಿರೋಳಿ, ಚಂದ್ರಶೇಖರ ಹಿರೇಮಠ, ಅಜೀತ ಕುಲಕರ್ಣಿ, ಮಹೇಶ ಪವಾರ, ಚನ್ನಪ್ಪ ಹತ್ತರ್ಕಿ, ಮಹೇಶ ಕಲಬುರಗಿ, ಉಮೇಶ ಪಾಟೀಲ, ಸಂಜಯ ಮೂಲಗೆ, ಪವನ ಕಲಶೆಟ್ಟಿ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.






