ಆಳಂದ | ಮೇ 25ರಂದು ಶಾಸಕ ಬಿ.ಆರ್.ಪಾಟೀಲ ಕಚೇರಿಗೆ ಮುತ್ತಿಗೆ : ಕಿಸಾನಸಭಾ ಎಚ್ಚರಿಕೆ

ಆಳಂದ : ರೈತಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಎರಡು ತಿಂಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೂ ಸರ್ಕಾರ ಹಾಗೂ ಜನಪ್ರತಿನಿಧಿಗಳಿಂದ ಸಮರ್ಪಕ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮೇ 25ರಂದು ಶಾಸಕ ಬಿ.ಆರ್. ಪಾಟೀಲ ಅವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕಿಸಾನಸಭಾ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ ಎಚ್ಚರಿಕೆ ನೀಡಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದ ಎದುರು ಕಿಸಾನಸಭಾ ಹಾಗೂ ಭಾರತೀಯ ಖೇತ ಮಜದೂರ ಯೂನಿಯನ್ ಆಶ್ರಯದಲ್ಲಿ ನಡೆಯುತ್ತಿರುವ ರೈತಪರ ಧರಣಿ ಸತ್ಯಾಗ್ರಹದ ವೇಳೆ ಗುರುವಾರ ನಡೆದ ಘೋಷಣಾ ಚಳವಳಿಯಲ್ಲಿ ಅವರು ಮಾತನಾಡಿದರು.
ರೈತ ಹೋರಾಟಗಳ ಬೆನ್ನೇರಿಕೊಂಡು ಅಧಿಕಾರಕ್ಕೆ ಬಂದ ಜನಪ್ರತಿನಿಧಿಗಳು ಈಗ ರೈತರ ಸಮಸ್ಯೆಗಳ ಬಗ್ಗೆ ಮೌನ ವಹಿಸಿರುವುದು ದುರಂತಕರ ಬೆಳವಣಿಗೆ ಎಂದು ಆರೋಪಿಸಿದರು.
ತಾಲೂಕಿನಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಅಂತರ್ಜಲ ಮಟ್ಟ ಹೆಚ್ಚಿಸಲು ಸಮಗ್ರ ಯೋಜನೆ ಜಾರಿಗೊಳಿಸಿ ಕೃಷಿಗೆ ನೀರಾವರಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಹಾಗೂ ಬಾಕಿ ಉಳಿದಿರುವ ಹೊಸ ವಿದ್ಯುತ್ ಸಂಪರ್ಕಗಳನ್ನು ತಕ್ಷಣ ನೀಡಬೇಕು ಎಂದು ಆಗ್ರಹಿಸಿದರು.
“ಎರಡು ತಿಂಗಳಿಂದ ಹೋರಾಟ ನಡೆಯುತ್ತಿದ್ದರೂ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸುವ ಪ್ರಯತ್ನ ಕೂಡ ಮಾಡಿಲ್ಲ. ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದನೆ ಸಿಗದ ಕಾರಣ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುತ್ತಿದೆ” ಎಂದು ಮೌಲಾ ಮುಲ್ಲಾ ಹೇಳಿದರು.
“ನಮ್ಮ ಹೊಲ – ನಮ್ಮ ರಸ್ತೆ” ಯೋಜನೆ ಜಾರಿಗೊಳಿಸಿ ಗ್ರಾಮೀಣ ಕೃಷಿ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು. ಖಾಸಗಿ ಲೇವಾದೇವಿ ಸಂಸ್ಥೆಗಳ ಅಕ್ರಮ ವ್ಯವಹಾರಗಳ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು. ದನಗಳ ಕೊಟ್ಟಿಗೆ ಹಾಗೂ ಕುರಿದೊಡ್ಡಿ ನಿರ್ಮಾಣಕ್ಕೂ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.
ಖಂಡಾಳ, ಕೊರಳ್ಳಿ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳ ಸಾಲದ ಒತ್ತಡದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಪಿಸಿದರು.
ಹೋರಾಟ ಸ್ಥಳಕ್ಕೆ ರಮೇಶ ಲೋಹಾರ, ರವಿ ಪಾಟೀಲ ಆಳಂಗಾ ಹಾಗೂ ಯುವ ಮುಖಂಡ ಮಹಾದೇವ ಕಾಂಬಳೆ ಬಬಲೇಶ್ವರ ಭೇಟಿ ನೀಡಿ ರೈತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕಿಸಾನಸಭಾ ಗೌರವ ಅಧ್ಯಕ್ಷ ಚಂದ್ರಕಾoತ ಖೋಬ್ರೆ, ತಾಲೂಕು ಅಧ್ಯಕ್ಷ ಧರ್ಮಣ್ಣಾ ಪೂಜಾರಿ, ನ್ಯಾಯವಾದಿ ಪಂಡಿತ ಸಲಗರ, ಕಮಲೇಶ ಅವುಟೆ, ರತನಚಂದ ಕಲಶೆಟ್ಟಿ, ಮಹಾದೇವ ಮಂಟಕಿ, ಕಭೀರಾ ಬೇಗಂ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.






