Aland | ಎನ್ಇಪಿ-2020 ಉನ್ನತ ಶಿಕ್ಷಣದಲ್ಲಿ ಐತಿಹಾಸಿಕ ಪರಿವರ್ತನೆ: ಪ್ರೊ. ಬಟ್ಟು ಸತ್ಯನಾರಾಯಣ

ಆಳಂದ, ಆ.1: ಎನ್ಇಪಿ-2020 ಭಾರತೀಯ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಹಾಗೂ ಪರಿವರ್ತನಾತ್ಮಕ ಸುಧಾರಣೆಗೆ ನಾಂದಿ ಹಾಡಿರುವ ಶಿಕ್ಷಣ ನೀತಿಯಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.
ತಾಲೂಕಿನ ಕಡಗಂಚಿ ಸಮೀಪದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಹಾಗೂ ಕೇಂದ್ರ ಉನ್ನತ ಶಿಕ್ಷಣ ಸಚಿವಾಲಯದ ಆಶ್ರಯದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮ ಅಂಗವಾಗಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)-2020ರ ಆರು ವರ್ಷಗಳ ಯಶಸ್ವಿ ಅನುಷ್ಠಾನ, ಸಾಧನೆಗಳು ಹಾಗೂ ಮುಂದಿನ ಕಾರ್ಯತಂತ್ರ ಕುರಿತು ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಕ್ಷಣ ತಜ್ಞರು, ನೀತಿ ನಿರೂಪಕರು, ಉದ್ಯಮ ಹಾಗೂ ಸರ್ಕಾರಿ ಸಂಸ್ಥೆಗಳನ್ನು ಒಂದೇ ವೇದಿಕೆಗೆ ತರುವ ಅಖಿಲ ಭಾರತೀಯ ಶಿಕ್ಷಾ ಸಮಾಗಮವು ಎನ್ಇಪಿ ಅನುಷ್ಠಾನದ ಸಾಧನೆಗಳನ್ನು ಮೌಲ್ಯಮಾಪನ ಮಾಡುವುದರ ಜೊತೆಗೆ ಭವಿಷ್ಯದ ಶಿಕ್ಷಣದ ದಿಕ್ಕು ರೂಪಿಸುವ ಮಹತ್ವದ ವೇದಿಕೆಯಾಗಿದೆ ಎಂದು ತಿಳಿಸಿದರು.
ಸಿಯುಕೆಯಲ್ಲಿ ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ ಹಾಗೂ ‘ಒನ್ ನೇಷನ್–ಒನ್ ಸಬ್ಸ್ಕ್ರಿಪ್ಷನ್’ ಸೇರಿದಂತೆ ಹಲವು ವಿದ್ಯಾರ್ಥಿ ಸ್ನೇಹಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದ್ದು, ಡಿಜಿಟಲ್ ಕಲಿಕಾ ವ್ಯವಸ್ಥೆಯ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು.
ಪರೀಕ್ಷಾ ನಿಯಂತ್ರಕ (ಪ್ರಭಾರ) ಪ್ರೊ. ಭರತ್ ಕುಮಾರ್ ಮಾತನಾಡಿ, ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ರೆಡಿಟ್ಗಳು ಸ್ವಯಂಚಾಲಿತವಾಗಿ ಖಾತೆಗೆ ಜಮೆಯಾಗಲಿದ್ದು, ಆನ್ಲೈನ್ ಹಾಗೂ ಆಫ್ಲೈನ್ ಕಲಿಕೆಯ ಸಮನ್ವಯಕ್ಕೆ ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಗಣಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎನ್. ಸಂದೀಪ್ ಮಾತನಾಡಿ, ಸಿಯುಕೆಯಲ್ಲಿ ಸ್ವಯಮದಾ ಆಧಾರಿತ ಪರೀಕ್ಷಾ ವ್ಯವಸ್ಥೆ ಯಶಸ್ವಿಯಾಗಿ ಜಾರಿಯಲ್ಲಿದ್ದು, ಸುಮಾರು 800 ಪ್ರಥಮ ವರ್ಷದ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡು ಪರೀಕ್ಷೆ ಪೂರ್ಣಗೊಳಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರಭಾರ ಕುಲಸಚಿವ ಪ್ರೊ. ವೆಂಕಟ ರಮಣ ದೊಡ್ಡಿ ಮಾತನಾಡಿ, ಎನ್ಇಪಿ ವಿದ್ಯಾರ್ಥಿಗಳಿಗೆ ತಮ್ಮ ಆಸಕ್ತಿ, ಕೌಶಲ್ಯ ಹಾಗೂ ವೃತ್ತಿ ಗುರಿಗೆ ಅನುಗುಣವಾಗಿ ಪಠ್ಯಕ್ರಮ ಆಯ್ಕೆ ಮಾಡುವ ಸ್ವಾತಂತ್ರ್ಯ ಕಲ್ಪಿಸಿದೆ ಎಂದು ಹೇಳಿದರು.
ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಪ್ರೊ. ಬಸವರಾಜ ಎಂ. ಕುಬಕಡ್ಡಿ ಮಾತನಾಡಿ, ಎನ್ಇಪಿ ಬಹುಶಿಸ್ತೀಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದು, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕಾಗಿ ವಿಶ್ವವಿದ್ಯಾಲಯದಲ್ಲಿ ಕೌನ್ಸೆಲಿಂಗ್ ಕೇಂದ್ರ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಶಿಕ್ಷಣ ವಿಭಾಗದ ಸಂಶೋಧನಾ ವಿದ್ಯಾರ್ಥಿ ನೀರವ್ ಕುಮಾರ್ ವಿದ್ಯಾರ್ಥಿ ಸಮುದಾಯದ ಪರವಾಗಿ ಮಾತನಾಡಿ, ಎನ್ಇಪಿ-2020 ಶಿಕ್ಷಣ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಎನ್ಇಪಿ ಸಂಯೋಜಕ ಪ್ರೊ. ಎಂ. ಪ್ರಶಾಂತ್ ಸ್ವಾಗತಿಸಿ, ಸಿಯುಕೆಯ ಎನ್ಇಪಿ ಅನುಷ್ಠಾನದ ಸಮಗ್ರ ಅವಲೋಕನ ನೀಡಿದರು. ಡಾ. ಉದಯ್ ಪಾಟೀಲ್ ವಂದಿಸಿದರು.






