ಆಳಂದ | ರೈತ–ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಕಚೇರಿ ಎದುರು ಪ್ರತಿಭಟನೆ

ಆಳಂದ: ರೈತರು, ಕೃಷಿ ಕಾರ್ಮಿಕರು ಹಾಗೂ ಅಂತರ್ಜಲ ವೃದ್ಧಿಗೆ ಸಂಬಂಧಿಸಿದ ವೈಜ್ಞಾನಿಕ ಕಾಮಗಾರಿಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎರಡು ತಿಂಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ಅಖಿಲ ಭಾರತ ಕಿಸಾನಸಭಾ ಹಾಗೂ ಭಾರತೀಯ ಖೇತ ಮಜದೂರ ಯುನಿಯನ್ ಮುಖಂಡರು ಸೋಮವಾರ ಶಾಸಕ ಬಿ.ಆರ್.ಪಾಟೀಲ್ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಪ್ರವಾಸಿ ಮಂದಿರದ ಮುಂದೆ ಆರಂಭಿಸಿದ್ದ ಅನಿರ್ದಿಷ್ಟಾವಧಿ ಧರಣಿಯಿಂದ ತೆರಳಿದ ಮುಖಂಡರು ಮತ್ತು ಕಾರ್ಯಕರ್ತರು ಘೋಷಣೆಗಳೊಂದಿಗೆ ಹೊಸ ಚೆಕ್ಪೋಸ್ಟ್ ಸಮೀಪದ ಶಾಸಕ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಕಿಸಾನಸಭಾ ರಾಜ್ಯ ಕಾರ್ಯದರ್ಶಿ ಮೌಲಾ ಮುಲ್ಲಾ ಹಾಗೂ ಜಿಲ್ಲಾ ಮುಖಂಡ ಭೀಮಾಶಂಕರ ಮಾಡಿಯಾಳ ನೇತೃತ್ವ ವಹಿಸಿದ್ದರು.
ಉರಿಯುವ ಬಿಸಿಲಿನ ನಡುವೆಯೂ ಪ್ರತಿಭಟನಾಕಾರರು ಸರ್ಕಾರ ಮತ್ತು ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಎರಡು ತಿಂಗಳಿಂದ ರೈತಪರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ, ರಸ್ತೆ ತಡೆ ಹಾಗೂ ವಿವಿಧ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ ಎಂದು ಮುಖಂಡರು ಆರೋಪಿಸಿದರು.
ಈ ವೇಳೆ ಮಾತನಾಡಿದ ಮೌಲಾ ಮುಲ್ಲಾ, “ರೈತಪರ ಹೋರಾಟದ ಧ್ವನಿ ಎತ್ತಿ ಅಧಿಕಾರಕ್ಕೆ ಬಂದ ಜನಪ್ರತಿನಿಧಿಗಳು ಇಂದು ತಮ್ಮದೇ ಕ್ಷೇತ್ರದ ರೈತರು ಮತ್ತು ಕಾರ್ಮಿಕರ ಸಮಸ್ಯೆಗಳ ಬಗ್ಗೆ ಮೌನ ವಹಿಸಿದ್ದಾರೆ. ಕುಡಿಯುವ ನೀರು, ನೀರಾವರಿ, ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳಿಗೆ ರೈತರು ಪರದಾಡುತ್ತಿದ್ದಾರೆ,” ಎಂದು ಕಿಡಿಕಾರಿದರು.
ಅಂತರ್ಜಲ ವೃದ್ಧಿಗೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸದೇ ಇರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಭೂಗರ್ಭ ಜಲಮಟ್ಟ ಹೆಚ್ಚಿಸಲು ವೈಜ್ಞಾನಿಕ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಜಿಲ್ಲಾ ಮುಖಂಡ ಭೀಮಾಶಂಕರ ಮಾಡಿಯಾಳ ಮಾತನಾಡಿ, ರೈತರು ಮತ್ತು ಕೃಷಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
“ನಮ್ಮ ಹೊಲ – ನಮ್ಮ ರಸ್ತೆ” ಯೋಜನೆ ಜಾರಿಗೆ ತರಬೇಕು. ರೈತರಿಗೆ ಅನುಕೂಲವಾಗುವಂತೆ ಕೃಷಿ ರಸ್ತೆಗಳ ಅಭಿವೃದ್ಧಿ ಮಾಡಬೇಕು. ಖಾಸಗಿ ಲೇವಾದೇವಿ ಸಂಸ್ಥೆಗಳ ಅಕ್ರಮ ವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸಬೇಕು,” ಎಂದು ಆಗ್ರಹಿಸಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳ ಲೂಟಿ ಹಾಗೂ ಅವ್ಯವಹಾರ ನಿಯಂತ್ರಣ ತಪ್ಪಿದ್ದು, ಸಾಲದ ಒತ್ತಡದಿಂದ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿರುವುದು ಆತಂಕಕಾರಿ ಎಂದು ಅವರು ಹೇಳಿದರು.
ಪ್ರತಿಭಟನೆಯ ವೇಳೆ ಕಾರ್ಯಕರ್ತರು ಶಾಸಕರ ವಿರುದ್ಧ ಹಾಗೂ ಅಧಿಕಾರಿಗಳ ಕಾರ್ಯವೈಖರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬೇಡಿಕೆಗಳ ಈಡೇರಿಕೆಯಲ್ಲಿ ವಿಳಂಬ ಮಾಡುತ್ತಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.
ನಂತರ ಪ್ರತಿಭಟನಾಕಾರರು ಶಾಸಕ ಕಚೇರಿಯ ಸಿಬ್ಬಂದಿಗಳಿಗೆ ಮನವಿ ಸಲ್ಲಿಸಿ, ರೈತಪರ ಬೇಡಿಕೆಗಳನ್ನು ತಕ್ಷಣ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕಿಸಾನಸಭಾ ಗೌರವ ಅಧ್ಯಕ್ಷ ಚಂದ್ರಕಾಂತ ಖೋಬ್ರೆ, ತಾಲೂಕು ಅಧ್ಯಕ್ಷ ಧರ್ಮಣ್ಣಾ ಪೂಜಾರಿ, ನ್ಯಾಯವಾದಿ ಪಂಡಿತ ಸಲಗರ, ಕಮಲೇಶ ಅವುಟೆ, ರತನಚಂದ ಕಲಶೆಟ್ಟಿ, ಮಹಾದೇವ ಮಂಟಕಿ, ಕಭೀರಾ ಬೇಗಂ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.






