Aland | ಮಹಿಳೆಯರ ಮೂಲಸೌಕರ್ಯಕ್ಕಾಗಿ ಅ.6ರಿಂದ ಏಕವ್ಯಕ್ತಿ ಪಾದಯಾತ್ರೆ

ಆಳಂದ : ಮಹಿಳೆಯರಿಗೆ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ಎಸ್. ವಾಲಿ ಅವರು ಅಕ್ಟೋಬರ್ 6ರಿಂದ ಆಳಂದದಿಂದ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿವರೆಗೆ ಸುಮಾರು 50 ಕಿಲೋಮೀಟರ್ ಏಕವ್ಯಕ್ತಿ ಕಾಲ್ನಡಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ರಫೀಕ್ ಇನಾಮದಾರ ತಿಳಿಸಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳನ್ನು ಸರ್ಕಾರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಯಾವುದೇ ಪಕ್ಷ, ಜಾತಿ ಅಥವಾ ರಾಜಕೀಯ ಭೇದವಿಲ್ಲದೆ ಈ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ಹೇಳಿದರು.
ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಮಹಿಳೆಯರಿಗೆ ಸಮರ್ಪಕ ಶೌಚಾಲಯಗಳಿಲ್ಲದೆ ಇಂದಿಗೂ ಬಯಲು ಪ್ರದೇಶದಲ್ಲೇ ಬಹಿರ್ದೆಸೆಗೆ ತೆರಳಬೇಕಾದ ಪರಿಸ್ಥಿತಿ ಇದೆ. ರಸ್ತೆ ಬದಿಗಳು, ಮುಳ್ಳು-ಕಂಟೆಗಳು ಹಾಗೂ ಕೆಸರಿನ ನಡುವೆ ಶೌಚಕ್ರಿಯೆ ನಡೆಸಬೇಕಾಗುತ್ತಿರುವುದು ಮಹಿಳೆಯರ ಘನತೆಗೆ ಧಕ್ಕೆ ತರುತ್ತಿದೆ. ವಾಹನ ಸಂಚಾರದ ವೇಳೆ ಅವಮಾನಕರ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತಿದೆ ಎಂದು ಅವರು ಹೇಳಿದರು.
ಸರ್ಕಾರದಿಂದ ಶೌಚಾಲಯ ನಿರ್ಮಾಣಕ್ಕೆ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ಬಳಕೆಯಾಗಿಲ್ಲ. ಹಲವೆಡೆ ಶೌಚಾಲಯಗಳೇ ಇಲ್ಲದಿದ್ದರೆ, ನಿರ್ಮಾಣಗೊಂಡಿರುವ ಶೌಚಾಲಯಗಳಲ್ಲಿ ನೀರು ಹಾಗೂ ಅಗತ್ಯ ಮೂಲಸೌಕರ್ಯಗಳ ಕೊರತೆಯಿಂದ ಅವು ಬಳಕೆಗೆ ಯೋಗ್ಯವಾಗಿಲ್ಲ. ಇದರಿಂದ ಮಹಿಳೆಯರು ಇಂದಿಗೂ ರಾತ್ರಿ ವೇಳೆಯಲ್ಲೇ ಶೌಚಕ್ರಿಯೆ ನಡೆಸುವ ಅನಿವಾರ್ಯ ಸ್ಥಿತಿ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅಕ್ಟೋಬರ್ 6ರಂದು ಬೆಳಿಗ್ಗೆ 10 ಗಂಟೆಗೆ ಆಳಂದ ಬಸ್ ನಿಲ್ದಾಣದಿಂದ ಪಾದಯಾತ್ರೆ ಆರಂಭವಾಗಿ ಕೊಡಲಹಂಗರಾ, ಲಾಡಚಿಂಚೋಳಿ ಹಾಗೂ ಕಡಗಂಚಿ ಮಾರ್ಗವಾಗಿ ಮೊದಲ ದಿನ ಸಾಗಲಿದೆ. ಬಳಿಕ ಅಕ್ಟೋಬರ್ 7ರಂದು ಕಲಬುರಗಿಗೆ ತಲುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈ ಹೋರಾಟ ಪಕ್ಷಾತೀತ ಹಾಗೂ ಜನಪರವಾಗಿದ್ದು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು, ಧಾರ್ಮಿಕ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ನೀಡುವಂತೆ ರಫೀಕ್ ಇನಾಮದಾರ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ಎಸ್. ವಾಲಿ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.






