ಸರ್ವ ಸ್ಪರ್ಶಿ, ಸರ್ವ ವ್ಯಾಪಿ, ಸರ್ವ ಅಭಿವೃದ್ಧಿ ಬಜೆಟ್ : ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಶರಣಪ್ರಕಾಶ್ ಪಾಟೀಲ್
ಕಲಬುರಗಿ : ಹಣಕಾಸು ಸಚಿವರೂ, ಮುಖ್ಯಮಂತ್ರಿಗಳೂ ಆಗಿರುವ ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ 16ನೇ ಬಜೆಟ್ ನಿಜಕ್ಕೂ ಸ್ವೀಟ್ 16 ಆಗಿದೆ. ಏಕೆಂದರೆ ಈ ಬಜೆಟ್ ಆಶಾದಾಯಕ ಮಾತ್ರವಲ್ಲ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್ ಮಂಡಿಸಿದ ನಂತರ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆರ್ಥಿಕ ತಜ್ಞರಾಗಿರುವ ಮುಖ್ಯಮಂತ್ರಿಗಳು ಸರ್ವಸ್ಪರ್ಶಿ ಬಜೆಟ್ ಮಂಡಿಸಿದ್ದಾರೆ. ಇದು ಅವರ ಅನುಭವ ಮತ್ತು ಸರ್ವರ ಏಳಿಗೆಗೆ ಅವರು ಹೊಂದಿರುವ ಮನಸ್ಥಿತಿಗೆ ಸಾಕ್ಷಿಯಾಗಿದೆ ಎಂದರು.
ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆಗೂ ಹೆಚ್ಚುವರಿ ಕೊಡುಗೆಗಳನ್ನು ನೀಡಿದ್ದಾರೆ. ಎಲ್ಲ ಇಲಾಖೆಗಳಿಗೂ ಸಿದ್ದರಾಮಯ್ಯ ಅವರು ಅನುದಾನ ಹಂಚಿಕೆ ಮಾಡುವ ಮೂಲಕ ಸಮಗ್ರ ಅಭಿವೃದ್ಧಿ ದೃಷ್ಟಿಕೋನ ಹೊಂದಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರಮುಖವಾಗಿ ನಮ್ಮ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಈ ಬಾರಿಯ ಬಜೆಟ್ನಲ್ಲಿ ಹೆಚ್ಚಿನ ಕೊಡುಗೆಗಳು ನೀಡಲಾಗಿದೆ. ನಮ್ಮ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಸಿದ್ದರಾಮಯ್ಯ ಅವರು, ಮಂಡಿಸಿದ 2025-2026ನೇ ಬಜೆಟ್ ಎಂದು ಡಾ.ಶರಣಪ್ರಕಾಶ್ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.







