Kalaburagi | ಅಂಬೇಡ್ಕರ್ ಜಯಂತ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸರ್ವ ಸಿದ್ಧತೆ : ಶಾಸಕ ಡಾ.ಅಜಯ್ ಸಿಂಗ್

ಕಲಬುರಗಿ : ಜೇವರ್ಗಿ ಪಟ್ಟಣದಲ್ಲಿ ಮೇ 17 ರಂದು ಹಮ್ಮಿಕೊಳ್ಳಲಾಗಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಲು ಸರ್ವ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಶಾಸಕ ಹಾಗೂ ಕೆಕೆಆರ್ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ತಿಳಿಸಿದ್ದಾರೆ.
ಪಟ್ಟಣದ ವಿವಿಧೆಡೆ ಜಯಂತ್ಯೋತ್ಸವದ ಅಂಗವಾಗಿ ನಡೆಯುತ್ತಿರುವ ಪೂರ್ವ ಸಿದ್ಧತೆಗಳನ್ನು ಖುದ್ದಾಗಿ ವೀಕ್ಷಿಸಿ, ಕಾರ್ಯಕ್ರಮದ ತಯಾರಿಗಳ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.
“ಬಾಬಾಸಾಹೇಬರ ವಿಚಾರಧಾರೆಗಳು ಇಡೀ ಮನುಕುಲಕ್ಕೆ ದಾರಿದೀಪವಾಗಿವೆ. ಅವರ ಜನ್ಮದಿನವನ್ನು ಕೇವಲ ಆಚರಣೆಯಾಗಿ ಮಾಡದೆ, ಸಮಾಜದಲ್ಲಿ ಅರಿವು ಮತ್ತು ಸಾಮರಸ್ಯ ಮೂಡಿಸುವ ಹಬ್ಬವಾಗಿ ಆಚರಿಸಲಾಗುವುದು” ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಹಾಗೂ ಮೆರವಣಿಗೆ ಮತ್ತು ವೇದಿಕೆ ಕಾರ್ಯಕ್ರಮಗಳು ಶಿಸ್ತುಬದ್ಧವಾಗಿ ನಡೆಯುವಂತೆ ಪದಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಈ ವೇಳೆ ಜಯಂತ್ಯೋತ್ಸವ ಸಮಿತಿಯ ಪದಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಡಾ. ಅಜಯ್ ಸಿಂಗ್, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಜಯಂತ್ಯೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ದಲಿತ ಸಂಘಟನೆಗಳ ಪ್ರಮುಖರು ಹಾಗೂ ಸಮಾಜದ ಹಿರಿಯ ಮುಖಂಡರು ಉಪಸ್ಥಿತರಿದ್ದರು.






