ಜೀವರ್ಗಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಜೀವರ್ಗಿ : ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತುಳಿತಕ್ಕೊಳಗಾದ ಸಮುದಾಯಗಳನ್ನು ಮೇಲಕ್ಕೆತ್ತಿದ ಮಹಾನ್ ವ್ಯಕ್ತಿ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಶಾಂತಾ ಬಿ.ಅಸ್ಟಿಗೆ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲ ಜೀವಿಗಳಿಗೆ ಬದುಕುವ ಹಕ್ಕು ಇದೆ ಎಂದು ಸಾರಿದ್ದಾರೆ. ಪ್ರಾಣಿಗಳ ಮೇಲೂ ದಯ ತೋರಬೇಕು ಎಂಬ ಸಂದೇಶವನ್ನು ನೀಡಿದ್ದಾರೆ. ಅವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ಹೇಳಿದರು.
ಹಿರಿಯ ಪ್ರಾಧ್ಯಾಪಕಿ ಡಾ. ರಾಬಿಯಾ ಬೇಗಂ ಅವರು ಮಾತನಾಡಿ, ಅಂಬೇಡ್ಕರ್ ಅವರ ವ್ಯಕ್ತಿತ್ವವನ್ನು ಭಾರತೀಯರು ಸಮಗ್ರವಾಗಿ ಅರ್ಥಮಾಡಿಕೊಳ್ಳಬೇಕಾಗಿದೆ. ಇಂದಿನ ವಿಶ್ವದಲ್ಲಿ ಶಾಂತಿಯ ಕೊರತೆ ಕಾಣಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ.ಶಿವಕುಮಾರ್ ಬಿ, ಅತಿಥಿ ಉಪನ್ಯಾಸಕರಾದ ಡಾ.ನಾಗನಗೌಡ ಅವರು ಮಾತನಾಡಿದರು. ವೇದಿಕೆಯಲ್ಲಿ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಎನ್.ಜಿ.ಶ್ರೀಧರ್, ಐಕ್ಯುಏಸಿ ಸಂಯೋಜಕ ಡಾ.ಸಂದೀಪ್ ತಿವಾರಿ, ನಿರ್ವಹಣಾಶಾಸ್ತ್ರ ವಿಭಾಗದ ಅಧ್ಯಾಪಕ ಹೊನ್ನೂರಸ್ವಾಮಿ ಉಪಸ್ಥಿತರಿದ್ದರು.
ಎನ್ನೆಸ್ಸೆಸ್ ಘಟಕದ ಸಂಚಾಲಕ ಡಾ. ಶರಣಪ್ಪ ಗುಂಡಗುರ್ತಿ ಸ್ವಾಗತಿಸಿದರು. ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ. ಖಾಜಾವಲಿ ಈಚನಾಳ ಕಾರ್ಯಕ್ರಮ ನಿರೂಪಿಸಿದರು. ಹಿಂದಿ ವಿಭಾಗದ ಮುಖ್ಯಸ್ಥ ಕುಪೇಂದ್ರ ವಂದಿಸಿದರು. ವಿವಿಧ ವಿಭಾಗಗಳ ಅಧ್ಯಾಪಕರು, ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.






