ಪ್ರಿಯಾಂಕ್ ಖರ್ಗೆಗೆ ಡಿಸಿಎಂ, ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡುವಂತೆ ಬಂಜಾರ ಸಮಾಜ ಮನವಿ

ಚಿತ್ತಾಪುರ; ಪ್ರಿಯಾಂಕ್ ಖರ್ಗೆ ಅವರನ್ನು ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಹಾಗೂ ಬಂಜಾರ ಸಮಾಜದ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಂಜಾರ ಸಮಾಜದ ಹಿರಿಯ ಮುಖಂಡ ಚಂದು ಜಾಧವ್ ಮತ್ತು ಯುವ ಅಧ್ಯಕ್ಷ ಜಗದೀಶ್ ಚವ್ಹಾಣ ಅವರು ಕಾಂಗ್ರೆಸ್ ಹೈ ಕಮಾಂಡ್'ಗೆ ಮನವಿ ಮಾಡಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರು ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳಡಿ ಮತ್ತು ಸಂವಿಧಾನದ ಆಶಯದಂತೆ ಮುನ್ನಡೆಯುತ್ತಿರುವ ಪ್ರಬುದ್ಧ ರಾಜಕಾರಣಿಯಾಗಿದ್ದು, ಬಿಜೆಪಿಗೆ ಟಕ್ಕರ್ ಕೊಡುವ ಏಕೈಕ ನಾಯಕರಾಗಿದ್ದಾರೆ. ಹೀಗಾಗಿ ಇವರನ್ನು ಉಪ ಮುಖ್ಯಮಂತ್ರಿಯಾಗಿ ಮಾಡಬೇಕು ಎಂದು ಆಗ್ರಹಿಸಿದರು.
ಸದಾ ಅಭಿವೃದ್ಧಿ ಪರ ಚಿಂತನೆ ಇರುವ ವೈಚಾರಿಕ ಮತ್ತು ವೈಜ್ಞಾನಿಕ ಮನೋಭಾವ ಉಳ್ಳ ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಮಾಡುವ ಮೂಲಕ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಇನ್ನೂ ಹೆಚ್ಚು ಕೆಲಸ ಮಾಡಲು ಅವಕಾಶ ನೀಡಬೇಕು ಎಂದರು.
ಬಂಜಾರ ಸಮಾಜ ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಾ ಬಂದಿದೆ. ಮುಂದೆಯೂ ಬೆಂಬಲ ನೀಡಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಂಜಾರ ಸಮಾಜದ ಶೇ.80 ಪ್ರತಿಶತ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಂದಿವೆ. ಆದರೂ ಸಮಾಜಕ್ಕೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದ್ದರಿಂದ ಈ ಬಾರಿಯ ಹೊಸ ಸಚಿವ ಸಂಪುಟದಲ್ಲಿ ಬಂಜಾರ ಸಮಾಜದ ಏಕೈಕ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬಂಜಾರ ಸಮಾಜದ ತಾಲೂಕು ಅಧ್ಯಕ್ಷ ಭೀಮಸಿಂಗ್ ಚವ್ಹಾಣ, ಮುಖಂಡರಾದ ದೇವಿದಾಸ್ ಚವ್ಹಾಣ, ವಿಜಯಕುಮಾರ್ ಚವ್ಹಾಣ ಯಾಗಾಪುರ, ಪ್ರವೀಣ್ ಪವಾರ, ರಾಕೇಶ್ ಪವಾರ, ಗೋಪಾಲ ರಾಠೋಡ ಉಪಸ್ಥಿತರಿದ್ದರು.






