ಜೂ.24ರಂದು ಆಳಂದದಲ್ಲಿ ‘ಬಸವ ಸಂಗಮ’; ವಿಶ್ವಗುರು ಬಸವಣ್ಣ ಜಯಂತಿ

ಆಳಂದ: ವಿಶ್ವಗುರು ಬಸವಣ್ಣ ಅವರ 893ನೇ ಜಯಂತ್ಯೋತ್ಸವದ ಅಂಗವಾಗಿ ಜೂನ್ 24ರಂದು ಪಟ್ಟಣದ ಶ್ರೀರಾಮ ಮಾರುಕಟ್ಟೆಯಲ್ಲಿ ನಡೆಯಲಿರುವ “ಬಸವ ಸಂಗಮ” ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದ್ದು, ಬಸವ ತತ್ವ, ವಚನ ಸಾಹಿತ್ಯ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶವನ್ನು ಜನತೆಗೆ ತಲುಪಿಸುವ ಉದ್ದೇಶದಿಂದ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಆನಂದ ಕೆ. ಪಾಟೀಲ ಹಾಗೂ ಉಪಾಧ್ಯಕ್ಷ ಸೋಮಶೇಖರ ಮುಲಗೆ ತಿಳಿಸಿದ್ದಾರೆ.
ಪಟ್ಟಣದ ವೀರಶೈವ ಲಿಂಗಾಯತ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಯಂತ್ಯೋತ್ಸವದ ವಾಲ್ಪೋಸ್ಟರ್ನ್ನು ಗೌರವ ಅಧ್ಯಕ್ಷ ಸಿದ್ಧೇಶ್ವರ ಶಿವಾಚಾರ್ಯರು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಉತ್ಸವ ಸಮಿತಿ ಮುಖಂಡರು, ಬಸವಣ್ಣನವರ ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳನ್ನು ಸಮಾಜದಲ್ಲಿ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ವರ್ಷದ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಜೂನ್ 24ರಂದು ಮಧ್ಯಾಹ್ನ 3.30ಕ್ಕೆ ಲಿಂಗಾಯತ ಭವನದಲ್ಲಿರುವ ಬಸವೇಶ್ವರರ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ನಂತರ ವಚನ ಜ್ಞಾನ ಭಂಡಾರದ ಪುಸ್ತಕಗಳೊಂದಿಗೆ ಭವ್ಯ ಮೆರವಣಿಗೆ, ತಾಯಂದಿರ ಕುಂಭೋತ್ಸವ ಹಾಗೂ ವಿವಿಧ ಕಲಾತಂಡಗಳೊಂದಿಗೆ ಶೋಭಾಯಾತ್ರೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಶ್ರೀರಾಮ ಮಾರುಕಟ್ಟೆ ತಲುಪಲಿದೆ.
ಸಂಜೆ 5 ಗಂಟೆಗೆ ನಡೆಯುವ ಬಸವ ಸಂಗಮ ಸಮಾರಂಭವು ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳು ಅವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಲಿದ್ದು, ವಿವಿಧ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ.
ವಿಶ್ವಗುರು ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿದ್ದು, ಯುವಜನತೆ ಬಸವ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮುಖಂಡರು ಅಭಿಪ್ರಾಯಪಟ್ಟರು.
ಸಾರ್ವಜನಿಕರು, ಬಸವ ಅನುಯಾಯಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಗೌರವ ಅಧ್ಯಕ್ಷ ಸಿದ್ಧೇಶ್ವರ ಶಿವಾಚಾರ್ಯರು, ನ್ಯಾಯವಾದಿ ಬಿ.ವಿ. ಪಾಟೀಲ, ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಶೇಗಜಿ ಹಾಗೂ ಇತರ ಮುಖಂಡರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಧರೆಪ್ಪ ಜಕಾಪೂರೆ, ಈರಣ್ಣಾ ಹತ್ತರಕಿ ಸೇರಿದಂತೆ ಉತ್ಸವ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು






