ಬರ ಘೋಷಣೆ, ರೈತರ ಪರಿಹಾರಕ್ಕೆ ಆಗ್ರಹ: ಆ.20ರಂದು ಕಲಬುರಗಿ ಬಂದ್ಗೆ ಕರೆ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ಭೀಕರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿ ಆಗಸ್ಟ್ 20ರಂದು ಕಲಬುರಗಿ ಬಂದ್ಗೆ ಕರೆ ನೀಡಲಾಗಿದೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯ ಸಂಚಾಲಕ ಶರಣಬಸಪ್ಪ ಮಮಶೆಟ್ಟಿ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್-ನಿನೋ ಪರಿಣಾಮ ಹಾಗೂ ಮುಂಗಾರು ಮಳೆಯ ಕೊರತೆಯಿಂದ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ತೀವ್ರವಾಗಿ ಹದಗೆಟ್ಟಿವೆ. ಹೆಸರು, ಉದ್ದು, ಸೋಯಾಬೀನ್, ಎಳ್ಳು, ಹತ್ತಿ, ಕಬ್ಬು ಸೇರಿದಂತೆ ಪ್ರಮುಖ ಬೆಳೆಗಳು ಸಮರ್ಪಕವಾಗಿ ಬೆಳೆಯದೆ ರೈತರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ. ಬೆಳೆ ವಿಮೆಯಲ್ಲಿಯೂ ರೈತರಿಗೆ ಅನ್ಯಾಯವಾಗಿದ್ದು, ಸರ್ಕಾರ ಬರ ಪರಿಹಾರ ಘೋಷಿಸುವಲ್ಲಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.
ಕಲಬುರಗಿಯನ್ನು ಭೀಕರ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಬರ ಪರಿಹಾರ ನೀಡಬೇಕು. ಬೆಳೆ ವಿಮೆಯಿಂದ ವಂಚಿತರಾಗಿರುವ ಎಲ್ಲ ರೈತರಿಗೆ ಕೂಡಲೇ ವಿಮಾ ಮೊತ್ತ ಬಿಡುಗಡೆ ಮಾಡಬೇಕು ಹಾಗೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಮಹಾರಾಷ್ಟ್ರದ ಪುಣೆ ಸಮೀಪದ ಉಜನಿ ಜಲಾಶಯದಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕು. ಅಂತರ್ಜಲ ಮಟ್ಟ ಕುಸಿದಿರುವುದರಿಂದ ಬೋರ್ವೆಲ್ ಹಾಗೂ ಬಾವಿಗಳು ಬತ್ತುತ್ತಿದ್ದು, ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಗೋಶಾಲೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದರು.
ಶುದ್ಧ ಕುಡಿಯುವ ನೀರು ಪೂರೈಸಲು ಆಗ್ರಹ :
ಕಲಬುರಗಿ ನಗರದಲ್ಲಿ ಸಾರ್ವಜನಿಕರಿಗೆ ಕಲುಷಿತ ನೀರು ಪೂರೈಕೆಯಾಗುತ್ತಿರುವ ಕುರಿತು ಕ್ರಮ ಕೈಗೊಳ್ಳಬೇಕು. ಎಲ್&ಟಿ ಕಂಪನಿಯ ವಿರುದ್ಧ ತನಿಖೆ ನಡೆಸಿ ತಪ್ಪಿತಸ್ಥರೆಂದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಒತ್ತಾಯಿಸಿದರು.
ಅರ್ಧಕ್ಕೆ ನಿಂತಿರುವ ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ಅಂಗವಿಕಲರ ಮಾಸಿಕ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಹಿಂಗಾರು ಬಿತ್ತನೆಗೆ ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಒದಗಿಸಬೇಕು. ರೈತರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಸಿ2+50ರಷ್ಟು ಕನಿಷ್ಠ ಬೆಂಬಲ ಬೆಲೆ (MSP) ಜಾರಿಗೆ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು.
ರೈತ ಹೋರಾಟಗಾರ ಮೌಲಾ ಮುಲ್ಲಾ ಮಾತನಾಡಿ, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಸರ್ಕಾರಗಳು ಅವರ ನೆರವಿಗೆ ಧಾವಿಸುತ್ತಿಲ್ಲ ಎಂದು ಆರೋಪಿಸಿದರು. ರೈತರಿಗೆ ಸಮರ್ಪಕ ಬೆಳೆ ವಿಮೆ ದೊರೆತಿಲ್ಲ. ಬರ ಪರಿಹಾರದ ಅನುದಾನವನ್ನೂ ಘೋಷಿಸಿಲ್ಲ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ರೈತರ ನೆರವಿಗೆ ಧಾವಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ವಿವಿಧ ಕನ್ನಡಪರ, ರಕ್ಷಣಾ ವೇದಿಕೆ ಹಾಗೂ ದಲಿತ ಸಂಘಟನೆಗಳ ಮುಖಂಡರು ಆಗಸ್ಟ್ 20ರ ಕಲಬುರಗಿ ಬಂದ್ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ವಿವಿಧ ಸಂಘಟನೆಗಳು ಬಂದ್ನಲ್ಲಿ ಕೈಜೋಡಿಸಲಿವೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಾಗೇಂದ್ರ ಥಂಬೆ, ಅರ್ಜುನ್ ಗೊಬ್ಬೂರ, ರವಿ ದೇಗಾಂವ್, ಸಂದೀಪ್ ಭರಣಿ, ಸಚಿನ್ ಫರಹತಾಬಾದ್, ಮಂಜುನಾಥ ನಾಲವಾರಕರ, ಕರೆಪ್ಪ ಕರಗೊಂಡ, ಪ್ರಕಾಶ್ ಜಾನೆ, ಭೀಮಾಶಂಕರ ಮಾಡಿಯಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.






