ಚಿಂಚೋಳಿ | ಭೂಮಿ ನೀಡಿದ ರೈತರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಸಿಪಿಐಎಂನಿಂದ ಪ್ರತಿಭಟನೆ

ಚಿಂಚೋಳಿ : ತಾಲ್ಲೂಕಿನ ಚೆಟ್ಟಿನಾಡು ಸಿಮೆಂಟ್ ಕಾರ್ಖಾನೆಗೆ ತಮ್ಮ ಫಲವತ್ತಾದ ಕೃಷಿ ಭೂಮಿಯನ್ನು ನೀಡಿ ಈಗ ಸಂಕಷ್ಟಕ್ಕೆ ಸಿಲುಕಿರುವ ರೈತ ಕುಟುಂಬಗಳಿಗೆ ಕಾಯಂ ನೌಕರಿ ನೀಡದೆ ವಂಚಿಸುತ್ತಿರುವ ಕಂಪನಿಯ ಧೋರಣೆಯನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐಎಂ) ವತಿಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕಾರ್ಖಾನೆಯ ಮುಂಭಾಗದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಮತ್ತು ಸಂತ್ರಸ್ತ ರೈತರು ಕಂಪನಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಕಾರ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ಮಾತನಾಡಿ, ಭೂಮಿ ನೀಡುವ ವೇಳೆ ಪ್ರತಿ ಕುಟುಂಬದ ಒಬ್ಬರಿಗೆ ಕಾಯಂ ನೌಕರಿ ನೀಡುವ ಭರವಸೆ ನೀಡಲಾಗಿತ್ತು. ಆದರೆ ಆ ಭರವಸೆ ಇಂದಿಗೂ ಈಡೇರಿಲ್ಲ. ಸ್ಥಳೀಯ ಅರ್ಹ ಯುವಕರನ್ನು ಕಡೆಗಣಿಸಿ ಅನ್ಯ ರಾಜ್ಯದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಇದಲ್ಲದೆ, ಕಂಪನಿಯ ಮಧ್ಯವರ್ತಿಗಳ ಮೂಲಕ ಭೂಮಿ ಕಳೆದುಕೊಂಡ ನೈಜ ಸಂತ್ರಸ್ತರಿಗೆ ಅನ್ಯಾಯವಾಗುತ್ತಿದ್ದು, ಭರವಸೆಗಳನ್ನು ಕೂಡಲೇ ಈಡೇರಿಸಬೇಕು. ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಕಲ್ಲೂರು ಗ್ರಾಮದ ಭೂಮಿ ಕಳೆದುಕೊಂಡ 17 ರೈತ ಕುಟುಂಬಗಳಿಗೆ ತಕ್ಷಣವೇ ಕಾಯಂ ನೌಕರಿ ನೀಡಬೇಕು. ಜೊತೆಗೆ ಸ್ಥಳೀಯ ನಿರುದ್ಯೋಗಿ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರರಿಗೆ ಹಾಗೂ ಕಂಪನಿ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಿಪಿಐಎಂ ಮುಖಂಡರಾದ ಜಾಫರ್ ಮೀರಿಯಾಣ, ಪ್ರಭು ಪ್ಯಾ ರಾಬದಿ, ಜಗದೇವಿ ಚಂದನಕೇರಾ, ಹಣಮಂತರಾವ್ ದೇಶಪಾಂಡೆ, ಭೀಮಶಾ ಕೊರದಂಪಳ್ಳಿ ಸೇರಿದಂತೆ ನೂರಾರು ರೈತರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.







