Chincholi | ಬಸವಣ್ಣನವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ಶಾಸಕ ಡಾ.ಅವಿನಾಶ್ ಜಾಧವ್

ಚಿಂಚೋಳಿ: ಬಸವಣ್ಣನವರ ತತ್ವಗಳನ್ನು ಕೇವಲ ಮಾತಿನಲ್ಲಿ ಹೇಳುವುದಲ್ಲ, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ಜಯಂತಿ ಆಚರಣೆಗೆ ನಿಜವಾದ ಅರ್ಥ ಸಿಗುತ್ತದೆ ಎಂದು ಶಾಸಕ ಡಾ. ಅವಿನಾಶ್ ಜಾಧವ್ ಹೇಳಿದರು.
ಪಟ್ಟಣದ ಚನ್ನ ಕಲ್ಯಾಣ ಮಂಟಪದಲ್ಲಿ 893ನೇ ಬಸವ ಜಯಂತ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ‘ಶರಣರ ಸಮಾಗಮ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಲಿಂಗಾಯತ ಸಮಾಜವು ಅತ್ಯಂತ ದೊಡ್ಡ ಹಾಗೂ ಗೌರವಾನ್ವಿತ ಸಮಾಜವಾಗಿದ್ದು, ಸಮಾಜದ ಪ್ರತಿಯೊಬ್ಬರೂ ಬಸವಣ್ಣನವರ ವಿಶ್ವಮಾನವ ಸಂದೇಶಗಳನ್ನು ಚಾಚೂ ತಪ್ಪದೆ ಪಾಲಿಸಿಕೊಂಡು ಬಂದಿದ್ದಾರೆ ಎಂದು ಹೇಳಿದರು.
ಜಗತ್ತಿನಲ್ಲಿ ಮೊಟ್ಟಮೊದಲ ಬಾರಿಗೆ ಮಹಿಳೆಯರಿಗೆ ಸಮಾನ ಹಕ್ಕು, ಗೌರವ ಹಾಗೂ ಸ್ಥಾನಮಾನ ನೀಡಿದ ಮಹಾನ್ ತತ್ವಜ್ಞಾನಿ ಬಸವಣ್ಣನವರು ಎಂದು ಸ್ಮರಿಸಿದ ಅವರು, ಲಿಂಗ ತಾರತಮ್ಯವಿಲ್ಲದ ಸಮಾನತೆಯ ಸಮಾಜ ನಿರ್ಮಾಣಕ್ಕೆ ಬಸವಣ್ಣನವರು ಶ್ರಮಿಸಿದ್ದಾರೆ ಎಂದು ತಿಳಿಸಿದರು.
ಸಂಸದ ಸಾಗರ ಖಂಡ್ರೆ ಮಾತನಾಡಿ, “ಬಸವಣ್ಣನವರ ವಚನಗಳು ಇಂದಿನ ಆಧುನಿಕ ಯುಗಕ್ಕೂ ಅತ್ಯಂತ ಪ್ರಸ್ತುತವಾಗಿವೆ. ಅವರ ಕಾಯಕ ಮತ್ತು ದಾಸೋಹ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಮಾನತೆ ನೆಲೆಸಲು ಬಸವ ತತ್ವವೇ ದಾರಿದೀಪ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮಕ್ಕೆ ಹಾರಕೂಡದ ಚನ್ನವೀರ ಶಿವಾಚಾರ್ಯರು, ಶಿವಕುಮಾರ ಸ್ವಾಮಿಗಳು ಹಾಗೂ ಪ್ರಭು ಖಟ್ವಾಂಗೇಶ್ವರ ದಿವ್ಯ ಸಾನ್ನಿಧ್ಯ ವಹಿಸಿದ್ದರು.
ವೇದಿಕೆಯಲ್ಲಿ ಮಾಜಿ ಶಾಸಕ ರಾಜಕುಮಾರ ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಠೋಡ, ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷ ವೀರಶೆಟ್ಟಿ ಯಂಪಳ್ಳಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.






