Chincholi | ವೀರಶೈವ–ಲಿಂಗಾಯತ ಒಂದೇ; ಧರ್ಮದ ಹೆಸರಿನಲ್ಲಿ ಗೊಂದಲ ಬೇಡ: ಶ್ರೀಶೈಲ ಜಗದ್ಗುರುಗಳ

ಚಿಂಚೋಳಿ: ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಆಗಿದ್ದು, ಸಮಾಜವನ್ನು ಒಡೆದು ರಾಜಕೀಯ ಲಾಭ ಪಡೆಯಲು ಕೆಲವರು ಅನಗತ್ಯ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಅಭಿಪ್ರಾಯಪಟ್ಟರು.
ಅಣವಾರ ಕ್ರಾಸ್ನ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಆಯೋಜಿಸಿದ್ದ ಶ್ರೀ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ, ಪಂಚಾಚಾರ್ಯರ ಯುಗಮಾನೋತ್ಸವ ಹಾಗೂ ಮಹಾತ್ಮ ಬಸವೇಶ್ವರ ಜಯಂತಿಯ ಜಂಟಿ ಮಹೋತ್ಸವವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ವಚನಗಳ ತಪ್ಪು ಅರ್ಥೈಸಿ ಸಮಾಜದಲ್ಲಿ ಗೊಂದಲ ಮೂಡಿಸುವವರ ಮಾತುಗಳಿಗೆ ಯಾರೂ ಕಿವಿಗೊಡಬಾರದು ಎಂದು ಹೇಳಿದ ಅವರು, ಪಂಚಾಚಾರ್ಯರು ಹಾಗೂ ಬಸವಾದಿ ಶಿವಶರಣರು ತಮ್ಮ ವಚನ ಮತ್ತು ಪರಂಪರೆಯ ಮೂಲಕ ಸಿದ್ಧಾಂತಗಳನ್ನು ಸಾರಿದ್ದಾರೆ ಎಂದು ಹೇಳಿದರು.
ಶ್ರದ್ಧೆ ಮತ್ತು ಭಕ್ತಿಯಿದ್ದಲ್ಲಿ ಪವಾಡಗಳು ಸಹಜವಾಗಿವೆ ಎಂದು ಅಭಿಪ್ರಾಯಪಟ್ಟ ಅವರು, ಸಮಾಜದ ಉಭಯ ಪರಂಪರೆಗಳನ್ನು ಗೌರವಿಸಿ ಶರಣರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಂದಿನ ದಿನಗಳಲ್ಲಿ ಎರಡೂ ಜಯಂತಿಗಳನ್ನು ಒಂದೇ ಸಮಯದಲ್ಲಿ ಆಚರಿಸುವ ಮೂಲಕ ಸಮಾನತೆಯ ಸಂದೇಶ ಸಾರಬೇಕೆಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಸೇಡಂ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್, ಶ್ರೀಶೈಲ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಲಕ್ಷಾಂತರ ಸಸಿಗಳನ್ನು ನೆಟ್ಟು ಹಸಿರು ಕ್ರಾಂತಿ ಮಾಡಿದ ಕೀರ್ತಿ ಶ್ರೀಶೈಲ ಜಗದ್ಗುರುಗಳಿಗೆ ಸಲ್ಲುತ್ತದೆ ಎಂದು ಪ್ರಶಂಸಿಸಿದರು.
ಮಾಜಿ ಸಂಸದ ಉಮೇಶ್ ಜಾಧವ್ ಮಾತನಾಡಿ, ಕರ್ನಾಟಕದಲ್ಲಿ ಮೊದಲ ಬಾರಿಗೆ ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆಗೆ ಅವಕಾಶ ದೊರಕಿಸಲು ತಾವು ಪ್ರಯತ್ನಿಸಿದ್ದಾಗಿ ಹೇಳಿದರು. ಸನಾತನ ಧರ್ಮವನ್ನು ಅಲುಗಾಡಿಸಲು ಕೆಲ ಶಕ್ತಿಗಳು ಯತ್ನಿಸುತ್ತಿದ್ದರೂ ಅದು ಶಾಶ್ವತವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಕಂಚಾಳಕುಂಟಿ ಮಠದ ಕರುಣೇಶ್ವರ ಶಿವಾಚಾರ್ಯರು ಮಾತನಾಡಿ, ರೇಣುಕಾಚಾರ್ಯರು ಧರ್ಮದ ದಂಡಯಾತ್ರೆ ಮೂಲಕ ಅಜ್ಞಾನದ ಕತ್ತಲೆಯನ್ನು ದೂರ ಮಾಡಿದ ಮಹಾತ್ಮರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಸಾನ್ನಿಧ್ಯ ವಹಿಸಿದ್ದರು. ವೇದಿಕೆಯಲ್ಲಿ ಅನಿಲಕುಮಾರ ಜಮಾದಾರ, ಸಮಿತಿ ಅಧ್ಯಕ್ಷ ಸಂಗಯ್ಯ ಸ್ವಾಮಿ, ಗೌರವ ಅಧ್ಯಕ್ಷ ವೀರಣ್ಣ ಗಂಗಾಣಿ, ಬಾಬುರಾವ ಪಾಟೀಲ್, ದೀಪಕನಾಗ ಪುಣ್ಯಶೆಟ್ಟಿ, ಉಮಾ ಪಾಟೀಲ್, ಮಲ್ಲಿಕಾರ್ಜುನ ಜಂಗಮಠ ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.






