Chitapur | ಅಲ್ಪಸಂಖ್ಯಾತರ ವಸತಿ ಶಾಲೆಗಳ ಸಮಸ್ಯೆಗೂ ಗಮನ ಹರಿಸಿ : ಸಜ್ಜನಶೆಟ್ಟಿ

ಚಿತ್ತಾಪುರ: ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ವಹಿಸುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಗಳ ಸಮಸ್ಯೆಗಳ ಬಗ್ಗೆಯೂ ಗಮನ ಹರಿಸಿ, ವಿದ್ಯಾರ್ಥಿಗಳ ಮೂಲಸೌಕರ್ಯ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಆಗ್ರಹಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಚಾರಗಳ ಕುರಿತು ಮಾತನಾಡುವುದಕ್ಕಿಂತ ಮೊದಲು ತಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು. ತಾಲೂಕಿನ ಎಲ್ಲ ವಸತಿ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ತಿಳಿದುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಸಚಿವರಿಗೆ ಅಧಿಕಾರಿಗಳ ಮೇಲೆ ಹಿಡಿತ ಇಲ್ಲದ ಕಾರಣ ಆಡಳಿತ ವ್ಯವಸ್ಥೆ ಕುಸಿದಿದೆ. ಚಿತ್ತಾಪುರ ಕ್ಷೇತ್ರವನ್ನು ಅವರು ಕಾಲೋನಿಯಂತೆ ಪರಿಗಣಿಸಿದ್ದು, ಯಾವಾಗ ಬರುತ್ತಾರೋ, ಯಾವಾಗ ಹೋಗುತ್ತಾರೋ ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.
ಕೆಲ ದಿನಗಳ ಹಿಂದೆ ಪಟ್ಟಣದ ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳು ತಟ್ಟೆ ಬಾರಿಸಿ ಪ್ರತಿಭಟನೆ ನಡೆಸಿದ್ದರು. ಇದೀಗ ದಂಡೋತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲೂ ಆಹಾರ ಮತ್ತು ಮೂಲಸೌಕರ್ಯ ಸಮಸ್ಯೆಗಳು ಬೆಳಕಿಗೆ ಬಂದಿವೆ. ಇದು ಮೊದಲ ಘಟನೆ ಅಲ್ಲ, ಪದೇಪದೇ ಇಂತಹ ಸಮಸ್ಯೆಗಳು ಮರುಕಳಿಸುತ್ತಿವೆ ಎಂದು ಆರೋಪಿಸಿದರು.
ವಸತಿ ಶಾಲೆಗಳಲ್ಲಿ ಕಳಪೆ ಗುಣಮಟ್ಟದ ಆಹಾರ, ಅರೆಬೆಂದ ಅನ್ನ, ಮೆನು ಪ್ರಕಾರ ಊಟ ನೀಡದಿರುವುದು, ತರಕಾರಿ ಹಾಗೂ ಬೇಳೆ ಕೊರತೆ, ವಾರಗಳಿಂದ ಸ್ನಾನ ಮತ್ತು ಕುಡಿಯುವ ನೀರಿನ ಸಮಸ್ಯೆ, ಶೌಚಾಲಯಗಳ ಕೊರತೆ ಹಾಗೂ ನೀರಿನ ಟ್ಯಾಂಕ್ನಲ್ಲಿ ಸತ್ತ ಪಾರಿವಾಳ ಪತ್ತೆಯಾದ ಘಟನೆಗಳು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿವೆ ಎಂದು ಅವರು ದೂರಿದರು.
ಈ ಕುರಿತು ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ಟಿಸಿ ನೀಡುವುದಾಗಿ ಪ್ರಾಂಶುಪಾಲರು ಬೆದರಿಕೆ ಹಾಕುತ್ತಿದ್ದಾರೆ ಎಂದು ವಿದ್ಯಾರ್ಥಿಗಳೇ ತಮ್ಮ ಅಳಲು ತೋಡಿಕೊಂಡಿದ್ದಾರೆ ಎಂದು ಹೇಳಿದರು.
ತಾಲೂಕಿನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ದಂಡೋತಿ ವಸತಿ ಶಾಲೆ ಘಟನೆಯಲ್ಲಿ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕೂಡಲೇ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ ಮಾತನಾಡಿ, ಸಚಿವರು ಬೆಂಗಳೂರಿನಲ್ಲಿ ಕುಳಿತು ಪತ್ರಿಕಾ ಹೇಳಿಕೆ ನೀಡುವುದಕ್ಕಿಂತ ಕ್ಷೇತ್ರದ ವಸತಿ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಬೇಕು. ಅಧಿಕಾರಿಗಳು ತಪ್ಪು ಮಾಹಿತಿಯನ್ನು ನೀಡಿ ಸಚಿವರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ನೆರವಾದವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುವುದು ಸರಿಯಲ್ಲ. ತಪ್ಪಿತಸ್ಥರ ವಿರುದ್ಧವೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ, ಪುರಸಭೆ ಮಾಜಿ ಅಧ್ಯಕ್ಷ ನಾಗರಾಜ ಭಂಕಲಗಿ, ಮಾಜಿ ಸದಸ್ಯ ಸುರೇಶ್ ಬೆನಕನಳ್ಳಿ, ಎಸ್ಟಿ ಮೋರ್ಚಾ ಅಧ್ಯಕ್ಷ ರಾಜು ದೊರೆ, ವಕ್ತಾರ ಶಿವರಾಮ್ ಚವ್ಹಾಣ, ಅಂಬರೀಷ್ ರಂಗನೂರ ಇದ್ದರು.






