Chitapur | ಕೃಷಿ ಇಲಾಖೆಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಸುನೀಲ್ ದೊಡ್ಡಮನಿ

ಚಿತ್ತಾಪುರ: ತಾಲೂಕಿನ ರೈತರು ಕೃಷಿ ಇಲಾಖೆಯ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ಕೃಷಿ ಅಭಿವೃದ್ಧಿಯತ್ತ ಹೆಜ್ಜೆ ಇಡಬೇಕು ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ನ ನಿರ್ದೇಶಕ ಸುನೀಲ್ ದೊಡ್ಡಮನಿ ಕರೆ ನೀಡಿದರು.
ತಾಲೂಕಿನ ಗುಂಡಗುರ್ತಿ ಹೋಬಳಿಯ ಗುಂಡಗುರ್ತಿ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ 2026-27ನೇ ಸಾಲಿನ ದ್ವಿದಳ ಧಾನ್ಯಗಳ ಆತ್ಮನಿರ್ಭರ ಪಲ್ಸ್ ಅಭಿಯಾನ ಯೋಜನೆಯಡಿ ಆಯೋಜಿಸಿದ್ದ ಉಚಿತ ತೊಗರಿ ಮಿನಿಕಿಟ್ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರೈತರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಪ್ರಯೋಜನ ಪಡೆದು ಉತ್ಪಾದನೆ ಹೆಚ್ಚಿಸಿಕೊಳ್ಳುವ ಮೂಲಕ ರೈತರು ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಲಹೆ ನೀಡಿದರು.
ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ್ ಮಾತನಾಡಿ, ದ್ವಿದಳ ಧಾನ್ಯಗಳ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಿ ರಾಜ್ಯವನ್ನು ಈ ಕ್ಷೇತ್ರದಲ್ಲಿ ಸ್ವಾವಲಂಬಿಯನ್ನಾಗಿ ಮಾಡುವ ಉದ್ದೇಶದಿಂದ ಆತ್ಮನಿರ್ಭರ ಪಲ್ಸ್ ಅಭಿಯಾನ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ತಾಲೂಕಿನಲ್ಲಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಉಚಿತವಾಗಿ ನೀಡಲಾಗುತ್ತಿರುವ ಗುಣಮಟ್ಟದ ತೊಗರಿ ಬೀಜಗಳನ್ನು ಬಳಸಿಕೊಂಡು ಹೆಚ್ಚಿನ ಇಳುವರಿ ಪಡೆಯಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಬಸವರಾಜ ಹೊಸಳ್ಳಿ, ಮಲ್ಲಿಕಾರ್ಜುನ, ಶ್ರೀನಿವಾಸ ನೆನಕ್ಕಿ, ಸುನೀಲ್ ಅಮ್ಮಗೋಳ, ಯೋಜನೆಯ ತಾಲೂಕು ನೋಡಲ್ ಆಧಿಕಾರಿ ಜುಲೈಕರ್ ಅಹ್ಮದ್, ಕೃಷಿ ಅಧಿಕಾರಿಗಳಾದ ಅಬ್ದುಲ್ ಕರೀಂ, ಸುರೇಖಾ, ವಿಶ್ವರಾದ್ಯ, ಕಲ್ಯಾಣಿ, ವಿರುಪಾಕ್ಷಿ, ಬಸವರಾಜ, ಶರಣಮ್ಮ, ಕನ್ಯಾಕುಮಾರಿ, ಲಕ್ಷ್ಮಿ ಸೇರಿದಂತೆ ಅನೇಕ ಮುಖಂಡರು ಹಾಗೂ ರೈತರು ಇದ್ದರು.






