ಕಾಂಗ್ರೆಸ್ ಕಾರ್ಯಕರ್ತರು ಕಮಿಷನ್ ದಂಧೆಯಲ್ಲಿ ತೊಡಗಿದ್ದಾರೆ; ಸಜ್ಜನಶೆಟ್ಟಿ ಆರೋಪ

ಚಿತ್ತಾಪುರ; ಪಟ್ಟಣದಲ್ಲಿ ನಡೆಯುತ್ತಿರುವ ಬಹುತೇಕ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಕಮಿಷನ್ ದಂಧೆಯಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ಮುಖಂಡ ರವೀಂದ್ರ ಸಜ್ಜನ್ ಶೆಟ್ಟಿ ಆರೋಪಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರವೀಂದ್ರ ಸಜ್ಜನ್ ಶೆಟ್ಟಿ, ಒಳ ಚರಂಡಿ ವ್ಯವಸ್ಥೆಗಾಗಿ ಕಳೆದ ವರ್ಷ 30 ಕೋಟಿ ರೂ. ಅನುದಾನ ಬಂದಿದ್ದು, ಅದರಲ್ಲಿ ಬಹುತೇಕ ಕಾಮಗಾರಿಗಳು ಕಳಪೆಯಿಂದ ಕೂಡಿವೆ. ಕೆಲಸ ಮಾಡಿದ ಗುತ್ತಿಗೆದಾರರಿಗೆ ಹಣ ಸಂದಾಯ ಮಾಡಿಲ್ಲವೆಂದು ಆರೋಪಿಸಲಾಗುತ್ತಿದೆ. ಸರಿಯಾಗಿ ಒಳಚರಂಡಿ ವ್ಯವಸ್ಥೆ ನಿರ್ಮಿಸದ ಕಾರಣ ಕೊಳಚೆ ನೀರು ನದಿಗೆ ಸೇರುತ್ತದೆ. ಚಿತ್ತಾಪುರ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿಯಿಂದ ಹೊರಗೆ ಬರುವುದು ಯಾವಾಗ? ಪ್ರಿಯಾಂಕ್ ಖರ್ಗೆ ಅವರು ಆರ್.ಎಸ್ ಎಸ್ ಜಪ ಬಿಟ್ಟು ತಾಲೂಕಿನ ಅಭಿವೃದ್ಧಿಗೆ ಸಂಕಲ್ಪ ಮಾಡಲಿ ಎಂದರು.
ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ಸುಮಾರು 5 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗಳು ಪೂರ್ಣಗೊಂಡಿಲ್ಲ. 2023-24ನೇ ಸಾಲಿನ 15ನೇ ಹಣಕಾಸು ಯೋಜನೆಯಲ್ಲಿ ಎರಡು ಕೋಟಿ ರೂ. ಅನುದಾನ ಮಂಜೂರಾಗಿದ್ದು, ಅಭಿವೃದ್ಧಿ ಕಾಮಗಾರಿಗಳು ನೆನೆಗುದಿಗೆ ಬಿದ್ದಿವೆ. ತಾಲೂಕಿನಾದ್ಯಂತ ಅಭಿವೃದ್ಧಿಯ ಹೆಸರಿನಲ್ಲಿ ಅನುದಾನ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ದೂರಿದರು.
ಈ ವೇಳೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ನಾಗರಾಜ ಹೂಗಾರ್, ಮಾಜಿ ವಿರೋಧ ಪಕ್ಷದ ನಾಯಕ ನಾಗರಾಜ್ ಭಂಕಲಗಿ, ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ದೀಪಕ್ ಹೊನ್ಸೂರಕರ್, ನಗರ ಯುವ ಮೋರ್ಚಾ ಅಧ್ಯಕ್ಷ ಸಂಗಮೇಶ ಪಾಟೀಲ್, ಮಲ್ಲಿಕಾರ್ಜುನ ಇಟಗಿ, ವಿಶ್ವನಾಥ್ ಹಾಬಾಳ, ರಮೇಶ್ ಬೊಮ್ಮನಹಳ್ಳಿ, ಶ್ಯಾಮಣ್ಣ ಮೇಧಾ, ಪ್ರಭು ಗಂಗಾಣಿ ಉಪಸ್ಥಿತರಿದ್ದರು.






