ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 50 ಕೆಪಿಎಸ್ ಶಾಲೆ ನಿರ್ಮಾಣ : ಶಾಸಕ ಡಾ.ಅಜಯ್ ಸಿಂಗ್

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಸಕ್ತ 2025-26ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ಪ್ರದೇಶದಲ್ಲಿ 100 ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣದ ಹೊರತಾಗಿ ಮಂಡಳಿಯಿಂದ ಹೆಚ್ಚುವರಿಯಾಗಿ 50 ಶಾಲೆ ನಿರ್ಮಾಣಕ್ಕೆ 100 ಕೋಟಿ ರೂ. ಅನುದಾನ ಖರ್ಚು ಮಾಡಲಾಗುತ್ತದೆ ಎಂದು ಕೆ.ಕೆ.ಅರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು.
ಶನಿವಾರ ಇಲ್ಲಿನ ಕೆ.ಕೆ.ಆರ್.ಡಿ.ಬಿ ಮಂಡಳಿ ಸಭಾಂಗಣದಲ್ಲಿ ಸಭೆಯ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತಲಾ 4 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ 100 ಕೆ.ಪಿ.ಎಸ್. ಶಾಲೆ ನಿರ್ಮಾಣ ಮಾಡುತ್ತಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಮಂಡಳಿಯಿಂದ 50 ಶಾಲೆ ನಿರ್ಮಾಣಕ್ಕೆ ಮಂಡಳಿ ಮತ್ತು ಸರ್ಕಾರ ತಲಾ 100 ಕೋಟಿ ರೂ. ಖರ್ಚು ಮಾಡಲಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಖಾಸಗಿ ಶಾಲೆ ಮೀರಿಸುವ ಶಾಲೆ ಇದಾಗಿದ್ದು, ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲಿದೆ ಎಂದರು.
ರಾಜ್ಯ ಸರ್ಕಾರ ಪ್ರಸಕ್ತ ಸಾಲಿಗೆ ಮಂಡಳಿಗೆ 5,000 ಕೋಟಿ ರೂ. ಅನುದಾನ ಘೋಷಿಸಿದ್ದು, ಅಷ್ಟು ಮೊತ್ತಕ್ಕೆ ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಯಡಿ ಕ್ರಿಯಾ ಯೋಜನೆ ರೂಪಿಸಲು ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮಂಡಳಿ ಅನುದಾನ ಖರ್ಚು ಮಾಡುತ್ತಿಲ್ಲ ಎಂಬ ಅಪವಾದ ದೂರ ಮಾಡಲು ಕಳೆದ ಆರ್ಥಿಕ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ 3,145 ಕೋಟಿ ರೂ. ಖರ್ಚು ಮಾಡಿದ್ದು, ಈ ವರ್ಷ ಸಂಪೂರ್ಣ ಅನುದಾನ ಖರ್ಚು ಮಾಡುವ ಗುರಿ ಹೊಂದಲಾಗಿದೆ ಎಂದ ಅವರು, ನಾನ್ ಟೆಂಡರಿಂಗ್ ಏಜೆನ್ಸಿಗಳಿಗೆ ಮಂಡಳಿಯ ಕಾಮಗಾರಿಗಳ ಪೈಕಿ ಶೇ.50ಕ್ಕಿಂತ ಹೆಚ್ಚಿನ ಕಾಮಗಾರಿಗಳು ನೀಡಬಾರದೆಂದು ನಿರ್ಧರಿಸಿದೆ ಎಂದರು.
ಡಾ.ಡಿ.ಎಂ.ನಂಜುಂಡಪ್ಪ ವರದಿಯಂತೆ ಕಳೆದ ಎರಡು ವರ್ಷದಿಂದ ಆರೋಗ್ಯ ಮತ್ತು ಶಿಕ್ಷಣ ಆವಿಷ್ಕಾರದ ಯೋಜನೆ ಜಾರಿಗೆ ಶೇ.25ರಷ್ಟು ಅನುದಾನ ಮೀಸಲಿರಿಸಿದ್ದು, ಈ ವರ್ಷ ಸಹ ಸದರಿ ಯೋಜನೆಗಳು ಮುಂದುವರೆಸಲು ಸಭೆಯಲ್ಲಿ ನಿರ್ಧರಿಸಿದೆ ಎಂದರು.
ಕಲಬುರಗಿಯಲ್ಲಿ ನಿಮ್ಹಾನ್ಸ್ ಶಾಖೆ, ಇನ್ಸ್ಟಿಟ್ಯೂಟ್ ಆಫ್ ಡಯಬಟಾಲೋಜಿ ಸೆಂಟರ್ ಸ್ಥಾಪನೆ, ರಾಯಚೂರು ಮತ್ತು ಬೀದರ್ನಲ್ಲಿ ಕ್ಯಾನ್ಸರ್ ಆಸ್ಪತ್ರೆ ಹಾಗೂ ಕೊಪ್ಪಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ನೀಡಲು ಮತ್ತು ಪ್ರದೇಶದಲ್ಲಿ ಎಂ.ಎಸ್.ಎಮ್.ಇ ಸಣ್ಣ ಕೈಗಾರಿಕೆ ಸ್ಥಾಪನೆಗೆ ನೆರವು ನೀಡಲು 100 ಕೋಟಿ ರೂ. ಅನುದಾನ ಮೀಸಲಿರಿಸಿ ಒದಗಿಸಲು ಸಭೆಯಲ್ಲಿ ನಿರ್ಧರಿಸಿದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶದ 7 ಜಿಲ್ಲೆಗಳಲ್ಲಿ ಅರಣ್ಯ ಕ್ಷೇತ್ರ ತುಂಬಾ ಕಡಿಮೆ ಇರುವುದರಿಂದ ಅರಣ್ಯ ಕ್ಷೇತ್ರ ವಿಸ್ತರಣೆಗೆ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಶೇ.50-50 ಅನುದಾನದಡಿ ಪ್ರದೇಶದಲ್ಲಿ ಹೆಚ್ಚಿನ ಸಸಿ ನೆಡಲಾಗುವುದು. ಸಮಾಜ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಸತಿ ನಿಲಯ ನಿರ್ಮಾಣ, ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ 125 ಕೋಟಿ ರೂ. ಸೇರಿದಂತೆ ಆಯವ್ಯಯ ಘೋಷಣೆ ಮತ್ತು ಸಚಿವ ಸಂಪುಟ ಸಭೆಯ ನಿರ್ಣಯದಂತೆ ಸುಮಾರು 1,500 ಕೋಟಿ ರೂ. ಅನುದಾನ ನೀಡಲು ನಿರ್ಧರಿಸಿದ್ದು, ಆಯಾ ಇಲಾಖೆಯಿಂದ ಇದೇ ಯೋಜನೆಗಳಿಗೆ ರಾಜ್ಯ ಸರ್ಕಾರದ ಪಾಲುದಾರಿಕೆಯಾಗಿ 1,500 ಕೋಟಿ ರೂ. ಗಳಿಗೂ ಹೆಚ್ಚಿನ ಹಣ ಆಯಾ ಇಲಾಖೆಯಿಂದ ಪ್ರದೇಶಕ್ಕೆ ಹರಿದು ಬರಲಿದೆ ಎಂದರು.
ಸಭೆಯಲ್ಲಿ ಎಸೆಸೆಲ್ಸಿ ಫಲಿತಾಂಶ ಕುಸಿತ ಮತ್ತು ಶಿಕ್ಷಣ ಕ್ಷೇತ್ರ ಸುದಾರಣೆ ಕುರಿತು ಸುರ್ದೀಘವಾಗಿ ಚರ್ಚಿಸಲಾಗಿದೆ. ಆಯಾ ಜಿಲ್ಲೆಯಲ್ಲಿ ಶಿಕ್ಷಣ ಮೂಲಸೌಕರ್ಯಕ್ಕೆ ಬೇಕಾಗಿರುವ ಅಗತ್ಯ ಯೋಜನೆಗಳು ಕುರಿತು ಶಿಕ್ಷಣ ಇಲಾಖೆಯು ಜಿಲ್ಲಾಧಿಕಾರಿಗಳಿಗೆ ಪಟ್ಟಿ ನೀಡಿದಲ್ಲಿ, ಅದೆಲ್ಲವನ್ನು ಮಂಡಳಿಯಿಂದ ಅನುದಾನ ಒದಗಿಸಿ ಪೂರ್ಣಗೊಳಿಸಲಾಗುವುದು ಎಂದರು.
ಕೃಷಿ ಆವಿಷ್ಕಾರಕ್ಕೆ ಒತ್ತು :
ಕೃಷಿ, ಜಲ, ಆರೋಗ್ಯ, ಪೋಷಣೆ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಶಿಕ್ಷಣ ತಜ್ಞರ ಸಮಿತಿ ಮಾದರಿಯಲಿಯೇ ಕೃಷಿ ಮತ್ತು ಜಲಸಂಪನ್ಮೂಲ ತಜ್ಞರ ಸಮಿತಿ ಹಾಗೂ ಆರೋಗ್ಯ ಮತ್ತು ಪೋಷಣೆ ತಜ್ಞರ ಸಮಿತಿ ಸ್ಥಾಪನೆಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಮಂಡಳಿ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಇದಲ್ಲದೆ ಪ್ರದೇಶದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಮತ್ತು ಕೆರೆ, ಚೆಕ್ ಡ್ಯಾಂ, ಬಾಂದಾರು ನಿರ್ಮಾಣಕ್ಕೆ 100 ಕೋಟಿ ರೂ. ಅನುದಾನ ಮೀಸಲಿರಿಸಲು ಮತ್ತು ಗ್ರಾಮೀಣ ಬಾಗದಲ್ಲಿ ಗೋಡೌನ್ ನಿರ್ಮಾಣ ಮಾಡಲಾಗುತ್ತಿದೆ. 50 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಯಲ್ಲಿ ಮೆಗಾ ಡೈರಿ ಸ್ಥಾಪಿಸುವ ನಿರ್ಣಯ ಕೈಗೊಂಡಿದ್ದು, ಈ ಎಲ್ಲಾ ಯೋಜನೆಗಳು ಕೃಷಿ ಆವಿಷ್ಕಾರಕ್ಕೆ ಹೆಚ್ಚಿನ ಒತ್ತು ನೀಡಲಿವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ, ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ಮಂಡಳಿ ಕಾರ್ಯದರ್ಶಿ ಎಂ.ಸುಂದರೇಶ ಬಾಬು, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯಕ್ತ ಡಾ.ಆಕಾಶ ಎಸ್. ಇದ್ದರು.