ಕಲಬುರಗಿಯಲ್ಲಿ ವಚನ ಮಂಟಪ ನಿರ್ಮಾಣ : ಡಾ.ಶರಣಪ್ರಕಾಶ್ ಪಾಟೀಲ್

ಕಲಬುರಗಿ : ಹನ್ನೆರಡನೇ ಶತಮಾನದಲ್ಲಿ ಜಾತಿ ರಹಿತ ಸಮ-ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಬದುಕಿನುದ್ದಕ್ಕೂ ಸರ್ವ ಜೀವಿಗೂ ಲೇಸನ್ನೆ ಬಯಸಿದ್ದ ಬಸವಣ್ಣ ಮತ್ತು ಬಸವಾದಿ ಶರಣರ ವಚನಗಳು ಇಡೀ ವಿಶ್ವಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಕಲಬುರಗಿಯಲ್ಲಿ ವಚನ ಮಂಟಪ ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೋವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಕಲಬುರಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಯಂತ್ಯೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಜಗತ್ ವೃತ್ತದಲ್ಲಿರುವ ಸಾಂಸ್ಕೃತಿಕ ನಾಯಕ ಬಸವೇಶ್ವರರ ಅಶ್ವಾರೋಹಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ವೇದಿಕೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಕಳೆದ 2024-25ನೇ ಸಾಲಿನ ರಾಜ್ಯ ಸರಕಾರದ ಆಯವ್ಯಯದಲ್ಲಿ ಇದನ್ನು ಘೋಷಿಸಿದ್ದು, ಕೂಡಲೇ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಹೀಗಾಗಿ ಜಿಲ್ಲಾಡಳಿತದಿಂದ ನೀಲಿ ನಕ್ಷೆ ತಯಾರಿಸುವ ಕೆಲಸ ನಡೆದಿದೆ ಎಂದು ಅವರು ತಿಳಿಸಿದರು.
ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ, ಅಫಜಲಪೂರ ಶಾಸಕರು ಮತ್ತು ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಎಂ.ವೈ.ಪಾಟೀಲ ಮಾತನಾಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ.ದುರ್ಗಾದಾಸ್ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀಶೈಲಂ ಸಾರಂಮಠದ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.
ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಗೆ ಸನ್ಮಾನ :
ಇದೇ ಸಂದರ್ಭದಲ್ಲಿ 2024ನೇ ಸಾಲಿನ ಉತ್ತಮ ಜಿಲ್ಲಾ ಚುನಾವಣಾಧಿಕಾರಿಗಳೆಂದು ಭಾರತ ಚುನಾವಣಾ ಆಯೋಗದಿಂದ ಪ್ರಶಸ್ತಿ ಪಡೆದಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ವೇದಿಕೆಯಲ್ಲಿ ಸಚಿವರಾದಿಯಾಗಿ ಗಣ್ಯರು ಸನ್ಮಾನಿಸಿದರು. ಇದಲ್ಲದೆ ಇತ್ತೀಚೆಗೆ ಯು.ಪಿ.ಎಸ್.ಸಿ. ಪರೀಕ್ಷೆಯಲ್ಲಿ 982ನೇ ರ್ಯಾಂಕ್ ಗಳಿಸಿದ ಡೋರ ಜಂಬಗಾ ಗ್ರಾಮದ ಯುವಕ ಮೋಹನಕುಮಾರ ಸಾಧನೆ ಗುರುತಿಸಿ ಅವರ ಪೋಷಕರನ್ನು ಸತ್ಕರಿಸಲಾಯಿತು.
ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಶಶೀಲ ಜಿ. ನಮೋಶಿ, ಕರ್ನಾಟಕ ಪರಿಸರ ಮಾಲಿನ ನಿಯಂತ್ರಣ ಮಂಡಳಿ ಸದಸ್ಯರು ಮತ್ತು ವೀರಶೈವ ಮಹಾಸಭೆ ಜಿಲ್ಲಾಧ್ಯಕ್ಷ ಶರಣು ಮೋದಿ, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್ಪಿ ಅಡ್ಡೂರು ಶ್ರೀನಿವಾಸಲು, ಜಿಪಂ ಸಿಇಒ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಸಹಾಯಕ ಆಯುಕ್ತೆ ಸಾಹಿತ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಅರುಣಕುಮಾರ, ನೀಲಕಂಠ ಮೂಲಗೆ ಸೇರಿದಂತೆ ಇತರ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು, ಸಾರ್ವಜನಿಕರು ಇದ್ದರು. ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸ್ವಾಗತಿಸಿದರು. ಸೋಮಶೇಖರ್ ಹಿರೇಮಠ ವಂದಿಸಿದರು. ಶ್ರೀಶೈಲ್ ಗೂಳಿ ನಿರೂಪಿಸಿದರು.









