ಆಳಂದ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು: ಸುಭಾಷ ಗುತ್ತೇದಾರ
ಬರ ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಪಾದಯಾತ್ರೆ, ಬೃಹತ್ ಪ್ರತಿಭಟನೆ

ಆಳಂದ: ಪ್ರಸಕ್ತ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಸುಮಾರು ಶೇ.80ರಷ್ಟು ಮಳೆ ಕೊರತೆಯಾಗಿದ್ದು, ತೊಗರಿ, ಹೆಸರು, ಉದ್ದು ಹಾಗೂ ಸೋಯಾಬೀನ್ ಸೇರಿದಂತೆ ಪ್ರಮುಖ ಬೆಳೆಗಳು ಸಂಪೂರ್ಣ ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಆಳಂದ ತಾಲೂಕನ್ನು ತಕ್ಷಣ ಬರಪೀಡಿತ ತಾಲೂಕು ಎಂದು ಘೋಷಿಸಬೇಕು. ಇಲ್ಲವಾದಲ್ಲಿ ಜನಪ್ರತಿನಿಧಿಗಳು ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಸುಭಾಷ ಆರ್. ಗುತ್ತೇದಾರ ಆಗ್ರಹಿಸಿದರು.
ಸೋಮವಾರ ಬಿಜೆಪಿ ಮಂಡಲ ವತಿಯಿಂದ ಗಡಿ ಗ್ರಾಮ ಖಜೂರಿಯಿಂದ ಆಳಂದ ಪಟ್ಟಣದವರೆಗೆ ಪಾದಯಾತ್ರೆ ನಡೆಸಿ, ಪಟ್ಟಣದ ಬಸ್ ನಿಲ್ದಾಣದ ಎದುರು ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮಳೆಯ ಕೊರತೆಯಿಂದ ಬೆಳೆಗಳು ಕೈಕೊಟ್ಟಿದ್ದು, ರೈತರು ಹಾಕಿದ ಬಂಡವಾಳವೂ ವಾಪಸ್ ಪಡೆಯಲಾಗದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಲಕ್ಷಾಂತರ ರೈತ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ ಎಂದರು.
ಸ್ಥಳೀಯ ಆಡಳಿತ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ತಳಮಟ್ಟದಲ್ಲಿ ಸಮರ್ಪಕವಾಗಿ ಜಂಟಿ ಬೆಳೆ ಸಮೀಕ್ಷೆ ನಡೆಸದೆ, ಕಚೇರಿಯಲ್ಲಿ ಕುಳಿತು ಸಿದ್ಧಪಡಿಸಿದ ತಪ್ಪು ವರದಿಗಳಿಂದಾಗಿ ಆಳಂದ ತಾಲೂಕು ಬರಪೀಡಿತ ತಾಲೂಕುಗಳ ಅಧಿಕೃತ ಪಟ್ಟಿಯಿಂದ ಹೊರಗುಳಿದಿದೆ ಎಂದು ಆರೋಪಿಸಿದರು.
ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ, ಸಮಗ್ರ ಮರು ಸಮೀಕ್ಷೆ ನಡೆಸಬೇಕು. ಆಳಂದ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಎರಡನೇ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.
‘ರೈತರ ಸಂಕಷ್ಟ ಆಲಿಸದ ಜನಪ್ರತಿನಿಧಿಗಳು’
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರ್ಷಾ ಗುತ್ತೇದಾರ ಮಾತನಾಡಿ, ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಜಿಲ್ಲೆಯ ಅಭಿವೃದ್ಧಿ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಅಗತ್ಯ ಗಮನ ನೀಡುತ್ತಿಲ್ಲ ಎಂದು ಆರೋಪಿಸಿದರು.
ಸ್ಥಳೀಯ ಶಾಸಕರು ಕ್ಷೇತ್ರದಲ್ಲಿದ್ದು ರೈತರ ಸಮಸ್ಯೆಗಳನ್ನು ಆಲಿಸುವ ಬದಲು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದಕ್ಕೆ ಸೀಮಿತರಾಗಿದ್ದಾರೆ ಎಂದು ಟೀಕಿಸಿದ ಅವರು, ಅಭಿವೃದ್ಧಿ ಕಾರ್ಯಗಳ ಕುರಿತು ಸಾರ್ವಜನಿಕವಾಗಿ ಚರ್ಚೆಗೆ ಸಿದ್ಧವಿರುವುದಾಗಿ ಹೇಳಿದರು. ತಮ್ಮ ತಂದೆಯವರ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಪೈಕಿ ಶೇ.10ರಷ್ಟು ಕೆಲಸವನ್ನಾದರೂ ಈಗಿನ ಆಡಳಿತ ಮಾಡಲಿ ಎಂದು ಸವಾಲು ಹಾಕಿದರು.
ಬಾಕಿ ಬೆಳೆವಿಮೆ ಬಿಡುಗಡೆಗೆ ಆಗ್ರಹ
ಭೀಕರ ಮಳೆ ಕೊರತೆಯಿಂದ ತಾಲೂಕಿನಲ್ಲಿ ಬರದ ಛಾಯೆ ಆವರಿಸಿದ್ದು, ರೈತರ ಖಾತೆಗಳಿಗೆ ಬಾಕಿ ಇರುವ ಬೆಳೆವಿಮೆ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು. ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು. ಅಲ್ಲದೆ, ಖಾಸಗಿ ವಿಂಡ್ ಪವರ್ ಕಂಪನಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಸೇರಿದಂತೆ ಸುಮಾರು 10 ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಮುಖ್ಯಮಂತ್ರಿ ಅವರಿಗೆ ಸಲ್ಲಿಸುವಂತೆ ತಹಶೀಲ್ದಾರ್ ಅಣ್ಣಾರಾವ ಪಾಟೀಲ ಅವರಿಗೆ ಪ್ರತಿಭಟನಾಕಾರರು ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ಈರಣ್ಣ ಮಂಗಾಣೆ, ಬಸವರಾಜ ಬಿರಾದಾರ, ಮಲ್ಲಣ್ಣ ನಾಗೂರೆ, ಕೆ.ಟಿ. ರಾಠೋಡ, ಬಾಬುಗೌಡ ಪಾಟೀಲ, ಶ್ರೀಶೈಲ ಪಾಟೀಲ, ಆನಂದ ಪಾಟೀಲ, ಪ್ರಕಾಶ ಮಾನೆ, ಸೀತಾರಾಮ ಜಮಾದಾರ, ಮಹೇಶ ಗೌಳಿ, ಮಹೇಶ್ ಸುರೆ, ನಾಗರಾಜ ಶೇಗಜಿ, ಶ್ರೀಕಾಂತ ಖಜೂನೆ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.






