ಕಲಬುರಗಿಯಲ್ಲಿ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಭ್ರಮಾಚರಣೆ

ಕಲಬುರಗಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.
ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ಕಾಂಗ್ರೆಸ್ ಮುಖಂಡ ಶರಣು ತೆಗ್ಗನೂರ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿ ವಿಜಯೋತ್ಸವ ಆಚರಿಸಲಾಯಿತು.
ಡಿ.ಕೆ. ಶಿವಕುಮಾರ್ ಅವರ 60 ಅಡಿ ಎತ್ತರದ ಕಟೌಟ್ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಹರ್ಷ ವ್ಯಕ್ತಪಡಿಸಿದರೆ, ಮುಖಂಡರು ಹಾಗೂ ಅಭಿಮಾನಿಗಳು ಪರಸ್ಪರ ಸಿಹಿ ಹಂಚಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಈ ವೇಳೆ ಮಾತನಾಡಿದ ಶರಣು ತೆಗ್ಗನೂರ, ರಾಜ್ಯದ ಅಭಿವೃದ್ಧಿಗೆ ದೂರದೃಷ್ಟಿ, ದೃಢ ನಾಯಕತ್ವ ಮತ್ತು ಜನಪರ ಆಡಳಿತ ಅತ್ಯಗತ್ಯವಾಗಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರವಲ್ಲದೆ ರಾಜ್ಯದ ಜನತೆಗೆ ಸಹ ಸಂತಸದ ವಿಚಾರವಾಗಿದೆ ಎಂದು ಹೇಳಿದರು.
"ಸಂಘಟನಾ ಶಕ್ತಿ, ಆಡಳಿತಾತ್ಮಕ ಅನುಭವ ಮತ್ತು ಅಭಿವೃದ್ಧಿ ಪರ ಚಿಂತನೆಯ ಮೂಲಕ ರಾಜ್ಯವನ್ನು ಹೊಸ ದಿಕ್ಕಿನಲ್ಲಿ ಮುನ್ನಡೆಸುವ ಸಾಮರ್ಥ್ಯ ಡಿ.ಕೆ. ಶಿವಕುಮಾರ್ ಅವರಲ್ಲಿದೆ. ಅವರ ನಾಯಕತ್ವದಲ್ಲಿ ಕರ್ನಾಟಕವು ಮತ್ತಷ್ಟು ಅಭಿವೃದ್ಧಿ ಮತ್ತು ಸಮೃದ್ಧಿಯತ್ತ ಸಾಗಲಿದೆ ಎಂಬ ವಿಶ್ವಾಸ ನಮಗಿದೆ" ಎಂದು ಅವರು ತಿಳಿಸಿದರು.






