ಗಣೇಶ ಚತುರ್ಥಿ: ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

ಜೇವರ್ಗಿ: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಆಯೋಜಿಸಲಾಯಿತು. ಸಭೆಯಲ್ಲಿ ಜೇವರ್ಗಿ ಪಟ್ಟಣದ ವಿವಿಧ ಧರ್ಮಗಳ ಮುಖಂಡರು, ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ರಾಜಕೀಯ ಮುಖಂಡರು ಭಾಗವಹಿಸಿ, ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಕುರಿತು ಚರ್ಚಿಸಿದರು.
ಗಣೇಶ ಚತುರ್ಥಿ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಕಾರ್ಯಕ್ರಮಗಳನ್ನು ನಡೆಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಅಧಿಕಾರಿಗಳು ಮುಖಂಡರೊಂದಿಗೆ ಚರ್ಚಿಸಿದರು.
ಹಬ್ಬದ ಸಂದರ್ಭದಲ್ಲಿ ಎಲ್ಲ ಧರ್ಮಗಳ ಜನರು ಪರಸ್ಪರ ಸಹಕಾರ, ಸಹಬಾಳ್ವೆ ಹಾಗೂ ಸೌಹಾರ್ದತೆ ಕಾಪಾಡಿಕೊಂಡು ಆಚರಣೆಯಲ್ಲಿ ಭಾಗವಹಿಸಬೇಕು. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಾಗೂ ಶಾಂತಿಗೆ ಯಾವುದೇ ರೀತಿಯ ಭಂಗ ಉಂಟಾಗದಂತೆ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ಕಲಬುರಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ್ ಮೇಘಣ್ಣನವರ, ಡಿವೈಎಸ್ಪಿ ಲೋಕೇಶ್ವರಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಬಾಪುಗೌಡ, ಪಿಎಸ್ಐ ಮೆಹೆಬೂಬ್ ಅಲಿ, ಲಕ್ಷ್ಮಣ್ ಟಿಎಂಸಿ, ಅಬಕಾರಿ ಪಿಎಸ್ಐ, ಕೆಇಬಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಅಬ್ದುಲ್ ರಹಮಾನ್ ಪಟೇಲ್, ರವಿ ಕೊಳಕೂರ, ಅಬ್ದುಲ್ ಗನಿ ಮಿರ್ಚಿ, ವಕೀಲ ಮೊಹಿಯುದ್ದೀನ್ ಇನಾಮ್ದಾರ್ ಸೇರಿದಂತೆ ಜೇವರ್ಗಿಯ ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ರಾಜಕೀಯ ಮುಖಂಡರು ಉಪಸ್ಥಿತರಿದ್ದರು.






