ಗುಲ್ಬರ್ಗಾ ವಿಶ್ವವಿದ್ಯಾಲಯದ ಕಾರ್ಯಸೌಧಕ್ಕೆ ಹೊರಗುತ್ತಿಗೆ ನೌಕರರಿಂದ ಮುತ್ತಿಗೆ; ಕುಲಪತಿ ಭರವಸೆಯ ಬಳಿಕ ಪ್ರತಿಭಟನೆ ಸಡಿಲ

ಕಲಬುರಗಿ: ಮರುನೇಮಕಕ್ಕೆ ಆಗ್ರಹಿಸಿ ಕಳೆದ 45 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಗುಲ್ಬರ್ಗಾ ವಿಶ್ವವಿದ್ಯಾಲಯದ ಹೊರಗುತ್ತಿಗೆ ನೌಕರರು ಮಂಗಳವಾರ ಸಂಜೆ ಕಾರ್ಯಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಹೊರಗುತ್ತಿಗೆ ಅವಧಿ ಮುಗಿದ ಹಿನ್ನೆಲೆಯಲ್ಲಿ 281 ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು. ಈ ಕ್ರಮ ಖಂಡಿಸಿ ನೌಕರರು ಕಳೆದ 45 ದಿನಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದು, ಜೂನ್ 9ರ ಸಿಂಡಿಕೇಟ್ ಸಭೆಯಲ್ಲಿ ತಮ್ಮ ಬೇಡಿಕೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಆಡಳಿತ ಭರವಸೆ ನೀಡಿತ್ತು.
ಮಂಗಳವಾರ ಬೆಳಗ್ಗೆಯಿಂದ ನಡೆದ ಸಿಂಡಿಕೇಟ್ ಸಭೆಯ ನಿರ್ಣಯಗಳನ್ನು ಧರಣಿನಿರತ ನೌಕರರಿಗೆ ತಿಳಿಸದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ತಾಳ್ಮೆ ಕಳೆದುಕೊಂಡು ಕಾರ್ಯಸೌಧದ ಮುಖ್ಯ ದ್ವಾರದ ಎದುರು ಧರಣಿ ನಡೆಸಿದರು. ಈ ವೇಳೆ ಕುಲಪತಿ, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೆಲಕಾಲ ತಳ್ಳಾಟ-ನೂಕಾಟವೂ ನಡೆದು ಕ್ಯಾಂಪಸ್ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಪ್ರತಿಭಟನಾಕಾರರು ಕುಲಪತಿ ಪ್ರೊ. ಶಶಿಕಾಂತ ಉಡಿಕೇರಿ, ಕುಲಸಚಿವ ಪ್ರೊ. ರಮೇಶ್ ಲಂಡನಕರ್ ಹಾಗೂ ಸಿಂಡಿಕೇಟ್ ಸದಸ್ಯರನ್ನು ಹೊರಗೆ ತೆರಳದಂತೆ ತಡೆದಿದ್ದರು. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಸಿಪಿಐ ಚಂದ್ರಶೇಖರ ತಿಗಡಿ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಯಿತು.
281 ನೌಕರರನ್ನು ಕೈಬಿಡುವುದಿಲ್ಲ: ಕುಲಪತಿ
ಬಳಿಕ ಪ್ರತಿಭಟನಾಕಾರರೊಂದಿಗೆ ಮಾತನಾಡಿದ ಕುಲಪತಿ ಪ್ರೊ. ಶಶಿಕಾಂತ ಉಡಿಕೇರಿ, “ಪ್ರಸ್ತುತ ಸೇವೆಯಲ್ಲಿದ್ದ 281 ನೌಕರರನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ. ಟೆಂಡರ್ ಪ್ರಕ್ರಿಯೆಯಲ್ಲಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಹೊಸ ಗುತ್ತಿಗೆದಾರರ ಆಯ್ಕೆಯೂ ಪೂರ್ಣಗೊಂಡಿದ್ದು, ಉಳಿದ ಪ್ರಕ್ರಿಯೆಗಳನ್ನು ಒಂದು ವಾರದೊಳಗೆ ಮುಗಿಸಿ ಮರುನೇಮಕಾತಿ ಮಾಡಿಕೊಳ್ಳಲಾಗುವುದು” ಎಂದು ಭರವಸೆ ನೀಡಿದರು.
ಕುಲಪತಿಯ ಭರವಸೆಯ ಬಳಿಕ ಪ್ರತಿಭಟನಾಕಾರರು ಮುತ್ತಿಗೆ ಹಿಂಪಡೆದು ಅಹೋರಾತ್ರಿ ಧರಣಿಯನ್ನು ಮುಂದುವರಿಸಿದರು.
ಇಬ್ಬರು ಮಹಿಳಾ ಸಿಬ್ಬಂದಿ ಅಸ್ವಸ್ಥ:
ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಗೀತಾ ಮತ್ತು ಕಾವ್ಯಾಶ್ರೀ ಎಂಬ ಇಬ್ಬರು ಮಹಿಳಾ ಸಿಬ್ಬಂದಿ ಘೋಷಣೆ ಕೂಗುತ್ತಿದ್ದ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದರು. ಅವರನ್ನು ತಕ್ಷಣ ಇಎಸ್ಐಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷ ಶೀಲಪ್ರಕಾಶ ದೊಡ್ಡಮನಿ, ಗೌರವಾಧ್ಯಕ್ಷ ವಿಜಯ ಕೆಂಗಲ್, ಕಾರ್ಯದರ್ಶಿ ಚಂದ್ರಶೇಖರ ಸಾವಳಗಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ನೌಕರರು ಉಪಸ್ಥಿತರಿದ್ದರು.






