15 ಸಾವಿರ ಶಿಕ್ಷಕರ ಆಯ್ಕೆ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್ : ಮೂರು ತಿಂಗಳೊಳಗಾಗಿ ಹೊಸ ನೇಮಕಾತಿಗೆ ನಿರ್ದೇಶನ

ಕಲಬುರಗಿ: 6ರಿಂದ 8ನೇ ತರಗತಿವರೆಗಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (ಜಿಪಿಎಸ್ಟಿಆರ್) ನೇಮಕಾತಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2023ರ ಫೆಬ್ರವರಿ ಮತ್ತು ಮಾರ್ಚ್ನಲ್ಲಿ ಪ್ರಕಟಿಸಿದ್ದ ತಾತ್ಕಾಲಿಕ ಹಾಗೂ ಅಂತಿಮ ಆಯ್ಕೆ ಪಟ್ಟಿಗಳನ್ನು ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠ ರದ್ದುಗೊಳಿಸಿ ಆದೇಶಿಸಿದೆ.
ರಾಜ್ಯ ಸರಕಾರವು 15 ಸಾವಿರ ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಆದರೆ, ಸಂವಿಧಾನದ 371(ಜೆ) ಕಲಂನ ಅನ್ವಯ ಕಲ್ಯಾಣ ಕರ್ನಾಟಕ (ಎಚ್ಕೆ) ಹಾಗೂ ಕಲ್ಯಾಣ ಕರ್ನಾಟಕೇತರ (ನಾನ್ ಎಚ್ಕೆ) ವೃಂದದ ಹುದ್ದೆಗಳ ಹಂಚಿಕೆ ಮತ್ತು ಮೀಸಲಾತಿ ನಿಗದಿಯಲ್ಲಿ ಉಂಟಾಗಿದ್ದ ಗೊಂದಲದಿಂದ ನೇಮಕಾತಿ ಪ್ರಕ್ರಿಯೆ ವಿವಾದಕ್ಕೆ ಕಾರಣವಾಗಿತ್ತು.
ಗೊಂದಲ ನಿವಾರಣೆಯಾಗುವವರೆಗೆ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ, ನಿಯಮಾನುಸಾರ ಹೊಸದಾಗಿ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಕೋರಿ ನರೇಂದ್ರಬಾಬು ಜಿ.ವಿ. ಹಾಗೂ ಇತರರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ನ್ಯಾಯಪೀಠವು, ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದ್ದ ತಾತ್ಕಾಲಿಕ ಮತ್ತು ಅಂತಿಮ ಆಯ್ಕೆ ಪಟ್ಟಿಗಳನ್ನು ರದ್ದುಗೊಳಿಸುವಂತೆ ಆದೇಶಿಸಿದೆ. ನಿಯಮಾನುಸಾರ ಅರ್ಹ ಎಲ್ಲ ಅಭ್ಯರ್ಥಿಗಳನ್ನು ಪರಿಗಣಿಸಿ, ಮೂರು ತಿಂಗಳೊಳಗಾಗಿ ಹೊಸದಾಗಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.
ಸರ್ಕಾರದ ಪರ ಹಾಜರಾಗಿದ್ದ ಹಿರಿಯ ವಕೀಲ ರೂಬೆನ್ ಜಾಕೊಬ್ ಅವರು, ಅಭ್ಯರ್ಥಿಗಳು ನಿರ್ದಿಷ್ಟ ವಿಷಯಗಳಿಗೆ ಸಂಬಂಧಿಸಿದಂತೆ ಮಾತ್ರ ಮೀಸಲಾತಿ ನಿಗದಿಯಲ್ಲಿನ ಗೊಂದಲವನ್ನು ಪ್ರಶ್ನಿಸಿದ್ದಾರೆ. ಹೀಗಾಗಿ, ಇಡೀ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸುವ ಬದಲು ನಿರ್ದಿಷ್ಟ ವಿಷಯಗಳ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಮಾತ್ರ ತೀರ್ಮಾನ ನೀಡಬೇಕು ಎಂದು ವಾದಿಸಿದ್ದರು. ಆದರೆ, ಈ ಮನವಿಯನ್ನು ನ್ಯಾಯಪೀಠ ಪುರಸ್ಕರಿಸಲಿಲ್ಲ.
ಇದೇ ವೇಳೆ, ನೇಮಕಾತಿ ಪ್ರಕ್ರಿಯೆಯಲ್ಲಿ ಗೊಂದಲಕ್ಕೆ ಕಾರಣವಾಗಿದ್ದ 2024ರ ಜನವರಿ 31ರಂದು ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ನೀಡಿದ್ದ ಆದೇಶ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿದ್ದ ಸಂಬಂಧಿತ ಸುತ್ತೋಲೆಯನ್ನೂ ನ್ಯಾಯಪೀಠ ರದ್ದುಗೊಳಿಸಿದೆ.






