ಸ್ವಾತಂತ್ರ್ಯ ದಿನಾಚರಣೆ: ಕಲಬುರಗಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಬೈಕ್ ರ್ಯಾಲಿ

ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಕ್ಷದ ಕಲಬುರಗಿ ಮಹಾನಗರ ಜಿಲ್ಲಾ ಯುವ ಮೋರ್ಚಾ ವತಿಯಿಂದ ನಗರದಲ್ಲಿ ದೇಶಭಕ್ತಿ ಹಾಗೂ ರಾಷ್ಟ್ರೀಯ ಏಕತೆಯ ಸಂದೇಶ ಸಾರುವ ಬೈಕ್ ರ್ಯಾಲಿ ನಡೆಯಿತು.
ನಗರದ ನೇತಾಜಿ ಚೌಕ್, ಗಂಜ್ನಿಂದ ಆರಂಭಗೊಂಡ ರ್ಯಾಲಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪಟೇಲ್ ವೃತ್ತದವರೆಗೆ ಸಾಗಿತು. ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷ ಚಂದು ಪಾಟೀಲ್ ಹಾಗೂ ಯುವ ಮೋರ್ಚಾ ಮಹಾನಗರ ಜಿಲ್ಲಾ ಅಧ್ಯಕ್ಷ ಮಹೇಶ್ ಚೌಹಾಣ್ ಅವರ ನೇತೃತ್ವದಲ್ಲಿ ರ್ಯಾಲಿ ಆಯೋಜಿಸಲಾಗಿತ್ತು.
ರ್ಯಾಲಿಯಲ್ಲಿ ಬಿಜೆಪಿ ಜಿಲ್ಲಾ ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಪ್ರಭಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ಹಿರಿಯ ಮುಖಂಡರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
ರ್ಯಾಲಿಯುದ್ದಕ್ಕೂ ಕಾರ್ಯಕರ್ತರು ‘ಭಾರತ ಮಾತಾ ಕೀ ಜೈ’, ‘ವಂದೇ ಮಾತರಂ’ ಘೋಷಣೆಗಳನ್ನು ಕೂಗಿದರು. ಯುವಜನರಲ್ಲಿ ದೇಶಭಕ್ತಿ, ರಾಷ್ಟ್ರೀಯ ಏಕತೆ ಹಾಗೂ ದೇಶದ ಬಗ್ಗೆ ಗೌರವದ ಭಾವನೆ ಬೆಳೆಸುವ ಉದ್ದೇಶದಿಂದ ಬೈಕ್ ರ್ಯಾಲಿ ಆಯೋಜಿಸಲಾಗಿದೆ ಎಂದು ಯುವ ಮೋರ್ಚಾ ಮುಖಂಡರು ತಿಳಿಸಿದರು.




