ಮಹಿಳೆಯರ ಹಕ್ಕುಗಳಿಗಾಗಿ ಆಳಂದದಿಂದ ಕಲಬುರಗಿವರೆಗೆ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆಯಿಂದ ಏಕಾಂಗಿ ಪಾದಯಾತ್ರೆ

ಆಳಂದ: ಮಹಿಳೆಯರ ಘನತೆ, ಸುರಕ್ಷತೆ ಹಾಗೂ ಮೂಲಭೂತ ಹಕ್ಕುಗಳ ಪ್ರಶ್ನೆಯನ್ನು ಸರ್ಕಾರದ ಗಮನಕ್ಕೆ ತರಲು ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ಎಸ್. ವಾಲಿ ಅವರು ಗುರುವಾರ ಆಳಂದದಿಂದ ಕಲಬುರಗಿವರೆಗೆ ಸುಮಾರು 50 ಕಿಲೋಮೀಟರ್ಗಳ ಏಕಾಂಗಿ ಪಾದಯಾತ್ರೆಗೆ ಚಾಲನೆ ನೀಡಿ ಗಮನ ಸೆಳೆದರು.
ಶುಕ್ರವಾರ ಕಲಬುರಗಿಗೆ ತಲುಪಲಿರುವ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಭೇಟಿ ಮಾಡಿ ಮಹಿಳೆಯರ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತ ಮನವಿಯನ್ನು ಸಲ್ಲಿಸಲಿದ್ದಾರೆ.
ತುಂತುರು ಮಳೆಯ ನಡುವೆಯೂ ಬೆಳಿಗ್ಗೆ 11 ಗಂಟೆ ಸುಮಾರಿಗೆ ಆರಂಭವಾದ ಪಾದಯಾತ್ರೆ ಕೇವಲ ರಾಜಕೀಯ ಕಾರ್ಯಕ್ರಮವಾಗಿರದೆ, ಗ್ರಾಮೀಣ ಮಹಿಳೆಯರ ದೈನಂದಿನ ಬದುಕಿನ ಸಂಕಷ್ಟ, ಗೌರವ ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ಸರ್ಕಾರದ ಗಮನಕ್ಕೆ ತರುವ ಜನಪರ ಚಳವಳಿಯಾಗಿ ರೂಪುಗೊಂಡಿತು.
ಆಳಂದ ಬಸ್ ನಿಲ್ದಾಣದಲ್ಲಿ ಮಹಿಳೆಯರು ಮಹೇಶ್ವರಿ ಎಸ್. ವಾಲಿ ಅವರಿಗೆ ಕುಂಕುಮ–ಅರಿಶಿಣ ಹಚ್ಚಿ, ಹೂಮಾಲೆ ಹಾಕಿ, ಶಾಲು ಹೊದಿಸಿ ಆತ್ಮೀಯವಾಗಿ ಬೀಳ್ಕೊಟ್ಟರು. ಜೆಡಿಎಸ್ ಕಾರ್ಯಕರ್ತರು, ಮಹಿಳೆಯರು, ಯುವಕರು ಹಾಗೂ ವಿವಿಧ ಸಂಘಟನೆಗಳ ಸಮಾನ ಮನಸ್ಕರು ಪಕ್ಷಾತೀತವಾಗಿ ಬೆಂಬಲ ಸೂಚಿಸಿ, ಬಸ್ ನಿಲ್ದಾಣದಿಂದ ತಾಲೂಕು ಆಡಳಿತ ಸೌಧದವರೆಗೆ ಸುಮಾರು ಏಳು ಕಿಲೋಮೀಟರ್ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.
ಆಡಳಿತ ಸೌಧಕ್ಕೆ ಆಗಮಿಸಿದ ಮಹೇಶ್ವರಿ ವಾಲಿ ಅವರು ಮೊದಲು ವಿಶ್ವಗುರು ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮನವಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರಿಗಾಗಿ ಅಗತ್ಯ ಸಂಖ್ಯೆಯಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು. ಈಗಿರುವ ಶೌಚಾಲಯಗಳಿಗೆ ನೀರು ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಿ, ಅವುಗಳ ಸಮರ್ಪಕ ನಿರ್ವಹಣೆಗೆ ಶಾಶ್ವತ ವ್ಯವಸ್ಥೆ ರೂಪಿಸಬೇಕು. ಮಹಿಳೆಯರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಶೌಚಾಲಯ ನಿರ್ಮಾಣಕ್ಕಾಗಿ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ಬಳಕೆಯಾಗದೆ ಅನೇಕ ಕಡೆ ಕಾಮಗಾರಿಗಳು ಅಪೂರ್ಣವಾಗಿವೆ. ಕೆಲವೆಡೆ ನಿರ್ಮಾಣಗೊಂಡ ಶೌಚಾಲಯಗಳು ನಿರ್ವಹಣೆಯ ಕೊರತೆಯಿಂದ ಬಳಕೆಗೆ ಯೋಗ್ಯವಾಗಿಲ್ಲ. ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಮಹಿಳೆಯರ ಘನತೆಯನ್ನು ಕಾಪಾಡುವ ಉದ್ದೇಶದಿಂದಲೇ ಈ ಪಾದಯಾತ್ರೆ ಕೈಗೊಂಡಿದ್ದೇನೆ ಎಂದು ಮಹೇಶ್ವರಿ ವಾಲಿ ಹೇಳಿದರು.
ತಹಸೀಲ್ದಾರ್ ಕಚೇರಿಯಿಂದ ಪುನಃ ಆರಂಭವಾದ ಪಾದಯಾತ್ರೆ ಕೊಡಲಹಂಗರ, ಲಾಡಚಿಂಚೋಳಿ ಹಾಗೂ ಕಡಗಂಚಿ ಮಾರ್ಗವಾಗಿ ಕಲಬುರಗಿಯತ್ತ ಸಾಗಿತು.
ಕಾರ್ಯಕ್ರಮಕ್ಕೆ ಪ್ರಭಾವತಿ ರವೀಂದ್ರ ಕೊರಳಿ ಚಾಲನೆ ನೀಡಿ ಶುಭ ಹಾರೈಸಿದರು. ಜ್ಯೋತಿ ಹಿರೇಮಠ ಮಾತನಾಡಿದರು.
ಯಾತ್ರೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ರಫೀಕ್ ಇನಾಮದಾರ, ಗುರುಸ್ವಾಮಿ, ವೆಂಕಟೇಶ ರಾಠೋಡ್, ಸೈಫಾನ್ ಪಟೇಲ್, ಸೈಯದ್ ಜಾಕೀರ್ ಸೇರಿದಂತೆ ಹಲವರು ಮಾತನಾಡಿದರು. ಸಂಗಮೇಶ ಸಜ್ಜನ್ ಸೇರಿದಂತೆ ಮಹಿಳೆಯರು, ವಿದ್ಯಾರ್ಥಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.






