ಕಲಬುರಗಿ | ಮೇ 25ರಂದು ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕಗಳಿಸಿದರಿಗೆ ಪ್ರಶಸ್ತಿ ಪ್ರದಾನ ಸಮಾರಂಭ : ವಿಜಯಕುಮಾರ ತೇಗಲತಿಪ್ಪಿ

ಕಲಬುರಗಿ : ಪ್ರಸಕ್ತ ಸಾಲಿನ ಹತ್ತನೇ ಪರೀಕ್ಷೆಯ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕಗಳಿಸಿದ ಕಲಬುರಗಿ ನಗರದ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಮೂಲಕ ಅವರಲ್ಲಿ ಮಾತೃ ಭಾಷಾಭಿಮಾನ, ನಾಡು-ನುಡಿಯ ಬಗ್ಗೆ ಗೌರವ ಹೆಚ್ಚಿಸಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮುಂದಾಗಿದ್ದು, ಕನ್ನಡ ಅಂಕವೀರರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಮೇ 25 ರ ಬೆಳಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಇವತ್ತಿನ ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡ ಭಾಷೆಯ ಉಳಿವಿಗೆ ಸಂಘಟಿತ ಪ್ರಯತ್ನ ಅಗತ್ಯವಾಗಿದೆ. ಮಾತೃಭಾಷೆಯ ಬೆಳವಣಿಗೆಗೆ ಶ್ರಮಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಇಂದಿನ ಹೊಸ ಪೀಳಿಗೆಯಲ್ಲಿ ಕನ್ನಡ ಭಾಷೆಯ ಅಭಿಮಾನದ ಕಿಚ್ಚು ಹಚ್ಚುವ ಮತ್ತು ಸಾಧನೆಯ ಹೊಸ ಕನಸು ಬಿತ್ತುವ ಪ್ರಾಮಾಣಿಕ ಕಾರ್ಯ ಪರಿಷತ್ತು ಮಾಡುತ್ತಿದೆ ಎಂದು ಅವರು ವಿವರಿಸಿದರು.
ಕಲಬುರಗಿ ನಗರದ ವ್ಯಾಪ್ತಿಯಲ್ಲಿ ಬರುವ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು 125ರ ಪೈಕಿ 120ಕ್ಕೂ ಹೆಚ್ಚು, ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು ಕನ್ನಡದಲ್ಲಿ 100ಕ್ಕೆ 95ಕ್ಕೂ ಹೆಚ್ಚು ಅಂಕ ಪಡೆದ ಆಸಕ್ತ ವಿದ್ಯಾರ್ಥಿಗಳು ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮೊ 9886560869 ಗೆ ಸಂಪರ್ಕಿಸಿ ತಮ್ಮ ಹೆಸರನ್ನು ಮೇ 20ನೇ ತಾರೀಖಿನೊಳಗೆ ನೋಂದಾಯಿಸಲು ಕೋರಲಾಗಿದೆ.





