Kalaburagi | ಭೀಮಾಗೆ ನಿಯಮಿತ ನೀರು ಹರಿಸಲು ಅಧ್ಯಯನ; ಅಧಿಕಾರಿಗಳ ತಂಡ ರಚನೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ: ಬಚಾವತ್ ಆಯೋಗದ ತೀರ್ಪಿನ ಅನ್ವಯ ಭೀಮಾ ಸಬ್ಬೇಸಿನ್ನಲ್ಲಿ ಕರ್ನಾಟಕಕ್ಕೆ ಹಂಚಿಕೆಯಾಗಿರುವ 15 ಟಿಎಂಸಿ ನೀರನ್ನು ಮಹಾರಾಷ್ಟ್ರದಿಂದ ನಿಯಮಿತವಾಗಿ ಹರಿಸದಿರುವ ಹಿನ್ನೆಲೆಯಲ್ಲಿ ಕಲಬುರಗಿ ಸೇರಿದಂತೆ ಭೀಮಾ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸಲು ನೀರಾವರಿ ಅಧಿಕಾರಿಗಳ ತಂಡವನ್ನು ಕೂಡಲೇ ರಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಭೀಮಾ ಪ್ರದೇಶದ ನೀರಾವರಿ ಯೋಜನೆಗಳ ಕುರಿತು ನೀರಾವರಿ ಅಧಿಕಾರಿಗಳು, ರೈತ ಮುಖಂಡರು ಹಾಗೂ ನೀರಾವರಿ ಹೋರಾಟ ಸಮಿತಿ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಬಚಾವತ್ ಆಯೋಗದ ತೀರ್ಪಿನ ಪ್ರಕಾರ ಭೀಮಾ ಸಬ್ಬೇಸಿನ್ನಲ್ಲಿ ಮಹಾರಾಷ್ಟ್ರಕ್ಕೆ 95 ಟಿಎಂಸಿ ಹಾಗೂ ಕರ್ನಾಟಕಕ್ಕೆ 15 ಟಿಎಂಸಿ ನೀರು ಹಂಚಿಕೆಯಾಗಿದೆ. ಆದರೆ ಕರ್ನಾಟಕದ ಪಾಲಿನ ನೀರನ್ನು ಮಹಾರಾಷ್ಟ್ರದಿಂದ ಅಗತ್ಯ ಸಂದರ್ಭದಲ್ಲಿ ನಿಯಮಿತವಾಗಿ ಹರಿಸಲಾಗುತ್ತಿಲ್ಲ. ಇದರಿಂದ ನೀರಿನ ಲಭ್ಯತೆಯಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಸಚಿವರು ಹೇಳಿದರು.
ಮಹಾರಾಷ್ಟ್ರದಲ್ಲಿ ಅನುಮತಿ ಇಲ್ಲದೆ ಅಣೆಕಟ್ಟು, ಸುರಂಗ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಿರ್ಮಿಸಿ ನೀರು ಸಂಗ್ರಹಿಸುವುದು ಹಾಗೂ ಸ್ಥಳೀಯವಾಗಿ ನೀರನ್ನು ತಿರುಗಿಸುವ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂಬ ಆರೋಪಗಳಿವೆ. ಇದರಿಂದ ನೈಸರ್ಗಿಕವಾಗಿ ಕೆಳಭಾಗದಲ್ಲಿರುವ ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ನೀರಿನ ಹರಿವಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಪರಿಣಾಮವಾಗಿ ಕುಡಿಯುವ ನೀರಿನ ಸಮಸ್ಯೆಯೂ ಉಲ್ಬಣಿಸುತ್ತಿದೆ ಎಂದು ಅವರು ತಿಳಿಸಿದರು.
ಮಹಾರಾಷ್ಟ್ರದ ಜಲಾಶಯಗಳಲ್ಲಿ ಡೆಡ್ ಸ್ಟೋರೇಜ್ ನೀರನ್ನೂ ಬಳಸಲಾಗುತ್ತಿದೆ ಎಂಬ ಆರೋಪಗಳಿದ್ದು, ಈ ಎಲ್ಲ ಅಂಶಗಳ ಕುರಿತು ವಾಸ್ತವಾಂಶಗಳನ್ನು ಪರಿಶೀಲಿಸಿ ಸಮಗ್ರ ವರದಿ ನೀಡಬೇಕು. ನೀರಿನ ಹಂಚಿಕೆ, ಜಲಾಶಯಗಳ ಸ್ಥಿತಿ, ನೀರಿನ ಹರಿವು, ನಿರ್ಮಾಣವಾಗಿರುವ ಯೋಜನೆಗಳು ಹಾಗೂ ಕರ್ನಾಟಕಕ್ಕೆ ಆಗುತ್ತಿರುವ ಪರಿಣಾಮಗಳ ಕುರಿತು ಅಧಿಕಾರಿಗಳ ತಂಡ ಕೂಲಂಕಷವಾಗಿ ಅಧ್ಯಯನ ನಡೆಸಬೇಕು ಎಂದು ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದರು.
ಅಧಿಕಾರಿಗಳ ತಂಡ ಸಲ್ಲಿಸುವ ವರದಿಯನ್ನು ಆಧರಿಸಿ ರಾಜ್ಯದ ನೀರಾವರಿ ಸಚಿವರು ಹಾಗೂ ಭೀಮಾ ಪ್ರದೇಶದ ಎಲ್ಲ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗುವುದು. ಬಳಿಕ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರದ ಗಮನಕ್ಕೆ ವಿಷಯವನ್ನು ತಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಬಚಾವತ್ ಆಯೋಗದ ತೀರ್ಪಿನ ಪ್ರಕಾರ ಕರ್ನಾಟಕಕ್ಕೆ ಹಂಚಿಕೆಯಾಗಿರುವ 15 ಟಿಎಂಸಿ ನೀರನ್ನು ಸಮರ್ಪಕವಾಗಿ ಸಂಗ್ರಹಿಸಿ ಬಳಸಿಕೊಳ್ಳಲು ರಾಜ್ಯದಲ್ಲಿ ಅಗತ್ಯ ಜಲಮೂಲಸೌಕರ್ಯ ನಿರ್ಮಾಣವಾಗಿದೆಯೇ ಎಂಬುದನ್ನೂ ಅಧಿಕಾರಿಗಳ ತಂಡ ಪರಿಶೀಲಿಸಬೇಕು ಎಂದು ಸಚಿವರು ಸೂಚಿಸಿದರು. ದೊರೆಯುವ ನೀರನ್ನು ಕೃಷಿ ಹಾಗೂ ಕುಡಿಯುವ ನೀರಿನ ಉದ್ದೇಶಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಲು ಅಗತ್ಯವಿರುವ ಮೂಲಸೌಕರ್ಯಗಳ ಕುರಿತು ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಬೇಕು ಎಂದರು.
ನೀರಾವರಿ ಹೋರಾಟ ಸಮಿತಿಯ ಪಂಚಪ್ಪ ಕಲಬುರಗಿ ಮಾತನಾಡಿ, ಬಚಾವತ್ ಆಯೋಗದ ತೀರ್ಪಿನಂತೆ ಭೀಮಾ ಸಬ್ಬೇಸಿನ್ನಲ್ಲಿ ಮಹಾರಾಷ್ಟ್ರಕ್ಕೆ 95 ಟಿಎಂಸಿ, ಕರ್ನಾಟಕಕ್ಕೆ 15 ಟಿಎಂಸಿ ಹಾಗೂ ಅವಿಭಜಿತ ಆಂಧ್ರಪ್ರದೇಶಕ್ಕೆ 6 ಟಿಎಂಸಿ ನೀರು ಹಂಚಿಕೆಯಾಗಿದೆ. ಆದರೆ ಕರ್ನಾಟಕಕ್ಕೆ ಹಂಚಿಕೆಯಾಗಿರುವ ನೀರನ್ನು ಮಹಾರಾಷ್ಟ್ರ ಸರ್ಕಾರ ಅಗತ್ಯ ಸಂದರ್ಭದಲ್ಲಿ ನಿಯಮಿತವಾಗಿ ಹರಿಸುತ್ತಿಲ್ಲ ಎಂದು ಆರೋಪಿಸಿದರು.
ಮಹಾರಾಷ್ಟ್ರದಲ್ಲಿ ಸುರಂಗ ಕೊರೆದು ಸೀನಾ ನದಿಗೆ ನೀರು ತಿರುಗಿಸುವಂತಹ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂಬ ಆರೋಪಗಳಿದ್ದು, ಅನಿಯಂತ್ರಿತವಾಗಿ ನೀರು ಹರಿಸಿದಾಗ ಭೀಮಾ ನದಿ ದಂಡೆಯಲ್ಲಿ ಪ್ರವಾಹ ಉಂಟಾಗಿ ಮತ್ತಷ್ಟು ಸಮಸ್ಯೆಗಳು ಎದುರಾಗುತ್ತಿವೆ ಎಂದು ಹೇಳಿದರು.
ಇದರಿಂದ ವಿಜಯಪುರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಆದ್ದರಿಂದ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರಬೇಕಾದ ನೀರನ್ನು ನಿಯಮಿತವಾಗಿ ಹರಿಸುವುದನ್ನು ಖಚಿತಪಡಿಸಿಕೊಳ್ಳಲು ಎರಡೂ ರಾಜ್ಯಗಳ ಉಸ್ತುವಾರಿಯಲ್ಲಿ ಮಾನಿಟರಿಂಗ್ ಸಮಿತಿ ರಚಿಸಬೇಕು. ಅಗತ್ಯವಿದ್ದರೆ ಸೂಕ್ತ ಕಾನೂನು ಹೋರಾಟದ ಮೂಲಕವೇ ಸಮಸ್ಯೆಗೆ ಪರಿಹಾರ ಕಂಡುಕೊಂಡು ನ್ಯಾಯ ಪಡೆಯಬೇಕು ಎಂದು ಆಗ್ರಹಿಸಿದರು.
ಪ್ರತಿ ವರ್ಷ ಕಲಬುರಗಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ನಾರಾಯಣಪುರ ಜಲಾಶಯದಿಂದ 1ರಿಂದ 2 ಟಿಎಂಸಿ ನೀರು ಹರಿಸುವ ಮೂಲಕ ತಾತ್ಕಾಲಿಕ ಪರಿಹಾರ ಕಲ್ಪಿಸಲಾಗುತ್ತಿದೆ. ಆದರೆ ಮಹಾರಾಷ್ಟ್ರದಿಂದ ಕರ್ನಾಟಕದ ಪಾಲಿನ ನೀರು ನಿಯಮಿತವಾಗಿ ಹರಿದುಬಂದರೆ ಮಾತ್ರ ಶಾಶ್ವತ ಪರಿಹಾರ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ರೈತ ಮುಖಂಡ ಶ್ರೀಮಂತ ಬಿರಾದಾರ ಮಾತನಾಡಿ, ಕಾವೇರಿ ನೀರಿನ ವಿಚಾರದಲ್ಲಿ ನಡೆದ ಹೋರಾಟದ ಮಾದರಿಯಲ್ಲಿ ಭೀಮಾ ನದಿ ನೀರಿನ ಹಕ್ಕಿಗಾಗಿ ಸಂಘಟಿತ ಚಳುವಳಿ ನಡೆಸಬೇಕಿದೆ. ಕರ್ನಾಟಕದ ಪಾಲಿನ ನೀರನ್ನು ಪಡೆಯಲು ಅಗತ್ಯವಿದ್ದರೆ ಕಾನೂನಿನ ಮೊರೆ ಹೋಗಬೇಕು. ಈ ವಿಚಾರದಲ್ಲಿ ರಾಜ್ಯ ಸರ್ಕಾರ ದೃಢ ನಿಲುವು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಅಫಜಲಪುರ ಶಾಸಕ ಎಂ.ವೈ. ಪಾಟೀಲ, ಸಿಂದಗಿ ಶಾಸಕ ಅಶೋಕ ಎಂ. ಮನಗೂಳಿ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಐಜಿಪಿ ಶಾಂತನು ಸಿನ್ಹಾ, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ, ಎಸ್ಪಿ ಅಡ್ಡೂರು ಶ್ರೀನಿವಾಸುಲು, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಸಂಕನೂರ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಸಹಾಯಕ ಆಯುಕ್ತರಾದ ಸಾಹಿತ್ಯ ಆಲದಕಟ್ಟಿ, ಪ್ರಭುರೆಡ್ಡಿ, ಕೆಎನ್ಎನ್ಎಲ್ ಕಲಬುರಗಿ ವೃತ್ತದ ಅಧೀಕ್ಷಕ ಅಭಿಯಂತ ಸತ್ಯಪ್ರಕಾಶ ಮೂಲಗೆ, ಬಿಎಲ್ಐಎಸ್ ಯೋಜನೆಯ ಇಇ ಶಿವಕುಮಾರ ಸ್ವಾಮಿ, ಎಇಇ ಸಂತೋಷಕುಮಾರ, ತಾಂತ್ರಿಕ ಸಹಾಯಕ ಪ್ರಸಾದ, ಸೆಕ್ಷನ್ ಆಫೀಸರ್ ಗುರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.






