ಕಲಬುರಗಿ | ಪ್ರವಾಹಪೀಡಿತ ಗ್ರಾಮಗಳಲ್ಲಿ 2,500 ಆಹಾರ ಸಾಮಗ್ರಿಗಳ ಪೊಟ್ಟಣ ವಿತರಣೆ: ಸಂಸದ ರಾಧಾಕೃಷ್ಣ ದೊಡ್ಡಮನಿ.

ಕಲಬುರಗಿ: ಜಿಲ್ಲೆಯ ಅತಿವೃಷ್ಠಿ ಹಾಗೂ ಪ್ರವಾಹ ಪರಿಸ್ಥಿತಿಯಿಂದ ಪ್ರಭಾವಿತಗೊಂಡ ಗ್ರಾಮಗಳ ಜನರಿಗೆ ನಾಳೆ (ಶುಕ್ರವಾರ)ಆಹಾರ ಸಾಮಗ್ರಿ ಪೊಟ್ಟಣಗಳು ಜಿಲ್ಲಾಡಳಿತದ ಮೂಲಕ ವಿತರಿಸಲಾಗುವುದಾಗಿ ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ತಿಳಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ಒಂದು ವಾರದಿಂದ ಹೇರಿದ ನಿರಂತರ ಮಳೆಯಿಂದ ಭೀಮಾ ಹಾಗೂ ಬೆಣ್ಣೆ ತೊರೆ ನದಿಗಳು ತುಂಬಿ ಹರಿಯುತ್ತಿದ್ದು, ನದಿಪಾತ್ರದ ಹಲವು ಗ್ರಾಮಗಳಲ್ಲಿ ಪ್ರವಾಹ ಉಂಟಾಗಿದೆ. ಪರಿಣಾಮವಾಗಿ ನೂರಾರು ಜನರನ್ನು ಸುರಕ್ಷಿತ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಸರ್ಕಾರಿ ಶಾಲೆಗಳು, ಸಮುದಾಯ ಭವನಗಳು ಹಾಗೂ ದೇವಾಲಯಗಳನ್ನು ಕಾಳಜಿ ಕೇಂದ್ರಗಳಾಗಿ ಪರಿವರ್ತಿಸಲಾಗಿದ್ದು, ಮಹಿಳೆಯರು, ಮಕ್ಕಳು ಮತ್ತು ವೃದ್ಧರಿಗೆ ಅಗತ್ಯ ವಸ್ತುಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.
“ನಾನು ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳು ಪ್ರವಾಹದಿಂದ ಹಾನಿಗೊಳಗಾದ ಜನರಿಗೆ ಅಗತ್ಯ ನೆರವು ನೀಡುತ್ತಿರುವೆವು. ಹಾನಿಗೊಂಡ ಕೃಷಿ, ತೋಟಗಾರಿಕೆ ಮತ್ತು ಮನೆಗಳ ಸರ್ವೆ ಮಾಡಲಾಗುತ್ತಿದೆ. ರಸ್ತೆ, ಮೂಲಭೂತ ಸೌಕರ್ಯಗಳ ಮರುಸ್ಥಾಪನೆಗೆ ತುರ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಅಧಿಕಾರಿಗಳ ತಂಡಗಳನ್ನು ಕಾಳಜಿ ಕೇಂದ್ರಗಳ ನಿರ್ವಹಣೆ ಮತ್ತು ಪ್ರವಾಹ ಪೀಡಿತ ಗ್ರಾಮಗಳ ಸುರಕ್ಷತೆಗೆ ನಿಯೋಜಿಸಲಾಗಿದೆ. ಮಳೆಯಿಂದ ಹಾನಿಗೊಳಗಾದ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ರಾಜ್ಯವ್ಯಾಪ್ತಿಯ ರಸ್ತೆಗಳು ಹಾಗೂ ಇತರೆ ಮೂಲಭೂತ ಸೌಕರ್ಯಗಳ ಮರುಸ್ಥಾಪನೆಗೆ ಕೇಂದ್ರ ಹಾಗೂ ರಾಜ್ಯದಿಂದ ಅಗತ್ಯ ಅನುದಾನ ತರುವಲ್ಲಿ ತುರ್ತು ಕ್ರಮವಹಿಸಲಾಗುವುದು ಎಂದು ಸಂಸದರು ಹೇಳಿದ್ದಾರೆ.







