Kalaburagi | ರೈಫಲ್ ಗನ್ನಿಂದ ಗುಂಡು ಹಾರಿಸಿಕೊಂಡು ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಕಲಬುರಗಿ: ಕರ್ತವ್ಯ ನಿರತ ಸಿಎಆರ್ (ಸಶಸ್ತ್ರ ಮೀಸಲು ಪಡೆ) ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ವಾಹನದಲ್ಲೇ ತಮ್ಮ ಸೇವಾ ರೈಫೇಲ್ ಗನ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಗರದ ಜಗತ್ ವೃತ್ತದ ಬಳಿ ನಡೆದಿದೆ.
ಮೃತರನ್ನು ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ನಿವಾಸಿ ಶಿವಕುಮಾರ್ ಮಾವನೂರ (32) ಎಂದು ಗುರುತಿಸಲಾಗಿದೆ. ಅವರು 2016ನೇ ಬ್ಯಾಚ್ನ ಪೊಲೀಸ್ ಪೇದೆಯಾಗಿದ್ದು, ಕರ್ತವ್ಯಕ್ಕಾಗಿ ನೀಡಲಾಗಿದ್ದ 7.62 ಸೇವಾ ಗನ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಿವಕುಮಾರ್ ಅವರು ಕೆಲ ತಿಂಗಳ ಹಿಂದೆ ಬೆಂಗಳೂರಿನಿಂದ ಕಲಬುರಗಿಗೆ ವರ್ಗಾವಣೆಯಾಗಿದ್ದು, ಸಿಎಆರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಡಿಸಿಪಿಗಳಾದ ಶಾಲೂ ಹಾಗೂ ಪ್ರವೀಣ ನಾಯಕ್, ಎಸಿಪಿ ಶರಣಪ್ಪ ಸುಬೇದಾರ, ಪಿಐ ಮಹಾಂತೇಶ ಪಾಟೀಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಘಟನೆ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.






