Kalaburagi | ಜಿಲ್ಲಾ ಪ್ರಥಮ ಶಿಕ್ಷಕರ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ಪೂರ್ಣ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಪ್ರೌಢಶಾಲಾ ಶಿಕ್ಷಕರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಗರದ ಕನ್ನಡ ಭವನದ ಸಾಹಿತ್ಯ ಮಂಟಪದಲ್ಲಿ ನಡೆಯಲಿರುವ ಜಿಲ್ಲಾ ಪ್ರಥಮ ಶಿಕ್ಷಕರ ಸಾಹಿತ್ಯ ಸಮ್ಮೇಳನದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಹಿರಿಯ ಶಿಕ್ಷಕ-ಸಾಹಿತಿ ರಾಜೇಂದ್ರ ಝಳಕಿ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮ್ಮೇಳನವನ್ನು ಅರ್ಥಪೂರ್ಣ ಹಾಗೂ ವೈಶಿಷ್ಟ್ಯಪೂರ್ಣವಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸಾರಸ್ವತ ಲೋಕದ ಶಿಕ್ಷಕರ ಸಮ್ಮಿಲನವಾಗಿ ರೂಪುಗೊಂಡಿರುವ ಈ ಒಂದು ದಿನದ ಸಮ್ಮೇಳನದಲ್ಲಿ ಶಿಕ್ಷಕರಿಂದಲೇ ಕವಿಗೋಷ್ಠಿ, ಚಿಂತನಾಗೋಷ್ಠಿ, ಸಾಹಿತ್ಯಿಕ ಸಂವಾದ, ಗುರು ಗೌರವ ಪುರಸ್ಕಾರ ಪ್ರದಾನ ಸೇರಿದಂತೆ ವಿವಿಧ ಸಾಹಿತ್ಯ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ಕನ್ನಡ ಭವನದವರೆಗೆ ಸಮ್ಮೇಳನಾಧ್ಯಕ್ಷರ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ ಚಾಲನೆ ನೀಡಲಿದ್ದಾರೆ.
ಬೆಳಿಗ್ಗೆ 11.15ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ಡಾ. ಶಶೀಲ್ ಜಿ. ನಮೋಶಿ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರ ಸಂಪಾದಕತ್ವದ ‘ಗುರು ಕಿರಣ’ ಕೃತಿಯನ್ನು ಜಿಲ್ಲಾಧಿಕಾರಿ ಇಕ್ರಾಮ್ ಷರೀಫ್ ಬಿಡುಗಡೆ ಮಾಡಲಿದ್ದಾರೆ.
ಸಮ್ಮೇಳನದಲ್ಲಿ ಶಿಕ್ಷಕ-ಸಾಹಿತಿಗಳಾದ ಡಾ. ಪ್ರಮೀಳಾ ಪಾಟೀಲ ಬಿಬ್ಬಳ್ಳಿ, ಬಸವರಾಜ ಐನೋಳ್ಳಿ, ಮಂಗಲಾ ಕಪರೆ, ಪ್ರಭು ಫುಲಾರಿ ಕರ್ಜಗಿ, ಲೀಲಾವತಿ ಕುಲಕರ್ಣಿ, ಅಂಬಾರಾಯ ಮಡ್ಡೆ, ಗಿರಿಮಲ್ಲಪ್ಪ ವಳಸಂಗ, ಆರ್.ಎಚ್. ಪಾಟೀಲ ಹಾಗೂ ಸಂತೋಷ ಹೂಗಾರ ಅವರಿಗೆ ‘ಗುರು ಗೌರವ ಪುರಸ್ಕಾರ’ ಪ್ರದಾನ ಮಾಡಿ ಸನ್ಮಾನಿಸಲಾಗುವುದು.
ಮಧ್ಯಾಹ್ನ ನಡೆಯುವ ಚಿಂತನಾಗೋಷ್ಠಿಯಲ್ಲಿ ಶೈಕ್ಷಣಿಕ ಸಮಸ್ಯೆಗಳು, ಗುಣಮಟ್ಟದ ಶಿಕ್ಷಣದಲ್ಲಿ ಶಿಕ್ಷಕರ ಪಾತ್ರ ಹಾಗೂ ಸಮ್ಮೇಳನಾಧ್ಯಕ್ಷರ ಬದುಕು-ಬರಹ ಕುರಿತು ಉಪನ್ಯಾಸಗಳು ನಡೆಯಲಿವೆ. ಬಳಿಕ ಶಿಕ್ಷಕರ ಕವಿಗೋಷ್ಠಿಯಲ್ಲಿ ಹಿರಿಯ ಹಾಗೂ ಯುವ ಶಿಕ್ಷಕ-ಕವಿಗಳು ಸಮಕಾಲೀನ ಶೈಕ್ಷಣಿಕ ಮತ್ತು ಸಾಮಾಜಿಕ ವಿದ್ಯಮಾನಗಳ ಕುರಿತು ಕವನ ವಾಚಿಸಲಿದ್ದಾರೆ.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ‘ಸೇವಾ ಗೌರವ ಪುರಸ್ಕಾರ’ ನೀಡಿ ಸನ್ಮಾನಿಸಲಾಗುವುದು ಎಂದು ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.






