Kalaburagi | ತಳವಾರ ಸಮುದಾಯಕ್ಕೆ ಎಸ್ಟಿ ಜಾತಿ ಪ್ರಮಾಣಪತ್ರ ನೀಡುವಂತೆ ಸಿಎಂಗೆ ಮನವಿ

ಕಲಬುರಗಿ: ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ತಳವಾರ ಸಮುದಾಯದ ಅರ್ಹ ಫಲಾನುಭವಿಗಳಿಗೆ ಪರಿಶಿಷ್ಟ ಪಂಗಡ (ಎಸ್ಟಿ) ಜಾತಿ ಪ್ರಮಾಣಪತ್ರಗಳನ್ನು ತಕ್ಷಣ ವಿತರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜ ಸಂಘದ ಅಧ್ಯಕ್ಷ ಸಂತೋಷ ತಳವಾರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಮನವಿಯಲ್ಲಿ, ಕೇಂದ್ರ ಸರ್ಕಾರವು 2020ರ ಮಾರ್ಚ್ 20ರಂದು ಹೊರಡಿಸಿದ ರಾಜ್ಯಪತ್ರ ಹಾಗೂ ಕರ್ನಾಟಕ ಸರ್ಕಾರವು 2020ರ ಮೇ 28ರಂದು ಹೊರಡಿಸಿದ ಅಧಿಸೂಚನೆಯ ಮೂಲಕ “Naikada/Nayak (including Parivar and Talawar)” ಸಮುದಾಯಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಅಲ್ಲದೆ, ರಾಜ್ಯ ಸರ್ಕಾರವು 2022ರ ಅಕ್ಟೋಬರ್ 29ರಂದು ತಳವಾರ ಜಾತಿಯನ್ನು ಹಿಂದುಳಿದ ವರ್ಗಗಳ ಪ್ರವರ್ಗ–1ರ ಪಟ್ಟಿಯಿಂದ ಕೈಬಿಟ್ಟಿರುವುದನ್ನೂ ಪ್ರಸ್ತಾಪಿಸಲಾಗಿದೆ.
ಆದರೂ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ತಳವಾರ ಸಮುದಾಯದ ಜನರಿಗೆ ಎಸ್ಟಿ ಜಾತಿ ಪ್ರಮಾಣಪತ್ರ ನೀಡುವಲ್ಲಿ ಅನಗತ್ಯ ವಿಳಂಬ ಮತ್ತು ಗೊಂದಲ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ.
ತಳವಾರ ಸಮುದಾಯವನ್ನು ಕೋಲಿ, ಕಬ್ಬಲಿಗ, ಅಂಬಿಗ, ಬೇಸ್ತ, ಗಂಗಾಮತ ಹಾಗೂ ಮಿನುಗಾರ ಸಮುದಾಯಗಳೊಂದಿಗೆ ಸಂಪರ್ಕಿಸುವ ಯಾವುದೇ ಅಧಿಕೃತ ದಾಖಲೆಗಳಿಲ್ಲ. ಆದರೂ ಇದೇ ಕಾರಣ ನೀಡಿ ಅಧಿಕಾರಿಗಳು ಪ್ರಮಾಣಪತ್ರ ವಿತರಣೆ ತಡೆಹಿಡಿದಿದ್ದಾರೆ ಎಂದು ದೂರಲಾಗಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯಲ್ಲಿದ್ದರೂ, ಅರ್ಜಿದಾರರ ದಾಖಲೆಗಳು ಹಾಗೂ ಪಂಚನಾಮೆ ವರದಿಗಳ ಆಧಾರದ ಮೇಲೆ ಜಾತಿ ಪ್ರಮಾಣಪತ್ರ ನೀಡುವುದನ್ನು ತಡೆಯುವ ಯಾವುದೇ ಆದೇಶ ಇಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಆದರೆ ಕಳೆದ ಎರಡು ವರ್ಷಗಳಿಂದ ಎಸ್ಟಿ ಪ್ರಮಾಣಪತ್ರ ಸಿಗದ ಕಾರಣ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ಇತರ ಅರ್ಹ ಫಲಾನುಭವಿಗಳು ಶಿಕ್ಷಣ, ಉದ್ಯೋಗ ಮತ್ತು ಸಂವಿಧಾನಬದ್ಧ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಲಾಗಿದೆ.
ತಳವಾರ ಜಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಿ, ಬಾಕಿ ಇರುವ ಎಸ್ಟಿ ಜಾತಿ ಪ್ರಮಾಣಪತ್ರಗಳನ್ನು ತ್ವರಿತವಾಗಿ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಲಾಗಿದೆ.






