ಕಲಬುರಗಿ | ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ

ಕಲಬುರಗಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಈ ಯೋಜನೆಯಡಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ.ನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ 1,00,000 ರೂ. ಸಾಲವನ್ನು ಶೇ. 2ರ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುತ್ತದೆ.
ಅರ್ಹ ಅಭ್ಯರ್ಥಿಗಳು ಕಡ್ಡಾಯವಾಗಿ kacdc.karnataka.gov.in ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ 2025ರ ಅ.31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ kacdc.karnataka.gov.in ವೆಬ್ಸೈಟ್ನ್ನು, ಕೇಂದ್ರ ಕಚೇರಿ ಸಹಾಯವಾಣಿ ಸಂಖ್ಯೆ 94484 51111, ಅಥವಾ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು, ಕಚೇರಿ ದೂರವಾಣಿ ಸಂಖ್ಯೆ 08472-278635 (ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ) ಸಂಪರ್ಕಿಸಬಹುದಾಗಿದೆ. ನಂತರ ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ನಿಗಮದ ಕಚೇರಿಯಲ್ಲಿ 2025ರ ಅಕ್ಟೋಬರ್ 31 ರೊಳಗಾಗಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.







