Kalaburagi | ಸರ್ಕಾರೇತರ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಕಲಬುರಗಿ : 2026-27ನೇ ಸಾಲಿನಲ್ಲಿ ನಾಗರೀಕ ಹಕ್ಕು ಸಂರಕ್ಷಣಾ ಅಧಿನಿಯಮ 1955 ಹಾಗೂ ಪರಿಶಿಷ್ಟ ಜಾತಿ/ವರ್ಗಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 ರಡಿ ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ಹಾಗೂ ಅರಿವು ಮೂಡಿಸುವ ಕಾರ್ಯಾಗಾರಗಳನ್ನು (ಸರ್ಕಾರದ ಆದೇಶಗಳು, ಮಾರ್ಗಸೂಚಿಗಳಂತೆ ಅನುಷ್ಠಾನಗೊಳಿಸಲುಸೂಚಿಸಿರುವುದರಿಂದ ವಿಚಾರಗೋಷ್ಠಿ ಹಾಗೂ ಅರಿವು ಮೂಡಿಸುವ ಕಾರ್ಯಾಗಾರ) ಏರ್ಪಡಿಸಲು ನೋಂದಾಯಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರೇತರ ಸಂಘ-ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸ್ವಯಂ ಸೇವಾ ಸಂಸ್ಥೆಗಳು ಇರಬೇಕಾದ ಅರ್ಹತೆಗಳು :
ಸ್ವಯಂ ಸೇವಾ ಸಂಸ್ಥೆಯು ನೋಂದಣಿಗೊಂಡಿದ್ದು, ನೋಂದಣಿ ಚಾಲ್ತಿಯಲ್ಲಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು. ಎಸ್.ಸಿ/ ಎಸ್.ಟಿ. ಜನರ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸುತ್ತಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಸಂಘಗಳಾಗಿರಬೇಕು. ಸಂಸ್ಥೆ-ಸಂಘ ಪ್ರತಿ ವರ್ಷ ಅಡಿಟ್ ಮಾಡಿಸಿರಬೇಕು. ಸಂಸ್ಥೆ-ಸಂಘವು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿರುವ ಅನುಭವ ಹೊಂದಿರಬೇಕು.
ಅರ್ಹ ಸರ್ಕಾರೇತರ ಸಂಘ-ಸಂಸ್ಥೆಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ 2026ರ ಜುಲೈ 22ರ ಸಂಜೆ 5 ಗಂಟೆಯೊಳಗಾಗಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.






