Kalaburagi | 371(ಜೆ) ವಿಶೇಷ ಸ್ಥಾನಮಾನ: ಅನುಷ್ಠಾನ ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ರಚನೆ

ಕಲಬುರಗಿ: ಸಂವಿಧಾನದ ಅನುಚ್ಛೇದ 371(ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ದೊರೆತಿರುವ ವಿಶೇಷ ಸ್ಥಾನಮಾನದ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ವಿವಿಧ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲಿಸಲು ರಾಜ್ಯ ಸರ್ಕಾರ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿದೆ.
ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉಪಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಹಾಗೂ ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್ ಅವರನ್ನು ಸಮಿತಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಶಿಕ್ಷಣ, ಉದ್ಯೋಗ, ಅಭಿವೃದ್ಧಿ ಯೋಜನೆಗಳ ಪರಿಶೀಲನೆ :
371(ಜೆ) ವಿಶೇಷ ಸ್ಥಾನಮಾನದ ಹಿನ್ನೆಲೆಯಲ್ಲಿ ಶಿಕ್ಷಣ, ಉದ್ಯೋಗ ಹಾಗೂ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಅನುಷ್ಠಾನ ಹೇಗೆ ಸಾಗುತ್ತಿದೆ ಎಂಬುದನ್ನು ಉಪಸಮಿತಿ ಪರಿಶೀಲಿಸಲಿದೆ.
ಈಗಾಗಲೇ ಹೊರಡಿಸಿರುವ ಸರ್ಕಾರಿ ಆದೇಶಗಳ ಅನುಷ್ಠಾನದ ಪ್ರಗತಿ, ಎದುರಾಗಿರುವ ಸಮಸ್ಯೆಗಳು ಹಾಗೂ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆಯೂ ಸಮಿತಿ ಪರಿಶೀಲನೆ ನಡೆಸಲಿದೆ.
ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ನಿಯಮ 13(5) ಹಾಗೂ 2025ರ ಮಾರ್ಚ್ 15ರ ಸುತ್ತೋಲೆ ಅನ್ವಯ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆಯು ಸಚಿವ ಸಂಪುಟ ಉಪಸಮಿತಿಗೆ ಅಗತ್ಯ ನೆರವು ನೀಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ (ಸಚಿವ ಸಂಪುಟ) ಜೆ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.






